ನಿಮ್ಮೊಡನಿದ್ದೂ ನಿಮ್ಮಂತಾಗದೆ

ಪ್ರಸ್ತುತ ಸಂದರ್ಭದಲ್ಲಿ ನಿಸಾರ್ ಅಹ್ಮದ್ ಅವರು ರಚಿಸಿದ ನಿಮ್ಮೊಡನಿದ್ದೂ ನಿಮ್ಮಂತಾಗದೆ ಎನ್ನುವ ಕವನ ಇಂದಿನ ದಿನಮಾನಗಳಲ್ಲಿ ವಾಸ್ತವಕ್ಕೆ ಹತ್ತಿರವಾಗಿದ್ದು, ನಮ್ಮನ್ನಗಲಿದ ಸಾಹಿತಿ ಕೆ.ಎಸ್.ನಿಸಾರ್ ಅಹ್ಮದ್ ಅವರಿಗೆ ‘ಉತ್ತರ ಪ್ರಭ’ದ ನುಡಿ ನಮನ…

ನಿಮ್ಮೊಡನಿದ್ದೂ ನಿಮ್ಮಂತಾಗದೆ
ಜಗ್ಗಿದ ಕಡೆ ಬಾಗದೆ
ನಾನು ನಾನೇ ಆಗಿ ಈ ನೆಲದಲ್ಲೇ ಬೇರೂರುತ್ತಿದ್ದರೂ ಬೀಗಿ
ಪರಕೀಯನಾಗಿ
ತಲೆಯೆತ್ತುವುದಿದೆ ನೋಡಿ
ಅದು ಬಲು ಕಷ್ಟದ ಕೆಲಸ.

ವೃತ್ತದಲ್ಲಿ ಉನ್ಮತ್ತರಾದ
ನಿಮ್ಮ ಕುಡಿತ ಕುಣಿತ ಕೂಟಗಳು
ಕೆಣಕಿ ಎಸೆದಿದ್ದರೂ
ಪಂಚೇಂದ್ರಿಯಕ್ಕೆ ಲಗಾಮು ಜಡಿದು ಜಾರದೆ ನಿಮ್ಮತ್ತ
ಸಂಯಮವನ್ನೇ ಪೋಷಿಸಿ ಸಾಕುತ್ತ
ರೇಖೆಯಲ್ಲೇ ದೊಂಬರಾಟ ನಡೆಸುವುದಿದೆ ನೋಡಿ
ಅದು ಬಲು ಕಷ್ಟದ ಕೆಲಸ.

ಒಳಗೊಳಗೆ ಬೇರುಕೊಯ್ದು
ಲೋಕದೆದುರಲ್ಲಿ ನೀರು ಹೊಯ್ದು
ನನ್ನ ಸಲಹುವ ನಿಮ್ಮ ಕಪಟ ಗೊತ್ತಿದ್ದರೂ
ಗೊತ್ತಿಲ್ಲದಂತೆ ನಟಿಸಿ
ಚಕಾರವೆತ್ತದೆ ನಿಮ್ಮೊಡನೆ ಕಾಫಿಹೀರಿ ಪೇಪರೋದಿ ಹರಟಿ
ಬಾಳ ತಳ್ಳುವುದಿದೆ ನೋಡಿ
ಅದು ಬಲು ಕಷ್ಟದ ಕೆಲಸ.

ನಿಮ್ಮ ಮಾತುಗಳಲ್ಲಿ ಹುದುಗಿದ ಬೆಕ್ಕು
ಸಂಶಯದ ಪಂಜವೆತ್ತಿ
ನನ್ನ ನಂಬಿಕೆ ನೀಯತ್ತು ಹಕ್ಕು
ಕೊನೆಗೆ ಸಾಚಾತನವನ್ನು ಪರಚಿ, ಒತ್ತಿ
ನೋವಿಗೆ ಕಣ್ಣು ತುಂಬಿದ್ದರೂ
ಚೆಲ್ಲಿದ ರಕ್ತದಲ್ಲಿ ರಾಷ್ಟ್ರೀಯತೆಯ ಧಾತುಗಳ
ನನ್ನೆದುರಿನಲ್ಲೇ ತನಿಖೆಮಾಡುವ ಕ್ಷಣವನ್ನು
ಹುಸಿನಗುತ್ತ ಎದುರಿಸುವುದಿದೆಯಲ್ಲ
ಅದು ಬಲು ಕಷ್ಟದ ಕೆಲಸ.

ಪ್ರೊ. ಕೆ. ಎಸ್. ನಿಸಾರ್ ಅಹ್ಮದ್

Exit mobile version