ತಿರುವನಂತಪುರಂ: ನಮ್ಮನ್ನು ಊರಿಗೆ ಕಳುಹಿಸಿ ಎಂದು ಸುಮಾರು 700 ವಲಸೆ ಕಾರ್ಮಿಕರು ಪೊಲೀಸರ ಮೇಲೆಯೇ ಕಲ್ಲು ತೂರಾಟ ನಡೆಸಿರುವ ಘಟನೆ ಕೇರಳದಲ್ಲಿ ನಡೆದಿದೆ.
ಕೇರಳದ ಅಕ್ಕಲಂ ಬಳಿಯ ಒರುವತಿಲ್ಕೋಟದಲ್ಲಿ ಭಾನುವಾರ ತಡರಾತ್ರಿ ಕಾರ್ಮಿಕರು ಸೇರಿಕೊಂಡು ನಮ್ಮನ್ನು ಊರಿಗೆ ಕಳುಹಿಸಲು ವ್ಯವಸ್ಥೆ ಮಾಡಿ ಎಂದು ಪ್ರತಿಭಟನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಪ್ರತಿಭಟನೆ ನಿಲ್ಲಿಸುವಂತೆ ಪೊಲೀಸರು ಮನವಿ ಮಾಡಿದ್ದರು. ಇದರಿಂದ ರೊಚ್ಚಿಗೆದ್ದ ಕಾರ್ಮಿಕರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.
ನಮ್ಮ ಬಳಿ ಊಟ ತಿನ್ನಲು ದುಡ್ಡು ಇಲ್ಲ, ಮಾಡಲು ಕೆಲಸವಿಲ್ಲ ನಮ್ಮನ್ನು ಊರಿಗೆ ಕಳುಹಿಸಿಕೊಡಿ ಎಂದು ಒತ್ತಾಯ ಮಾಡಿದ್ದಾರೆ. ಮಾ. 24ರಿಂದ ಕೊರೊನಾ ಹಿನ್ನೆಲೆಯಲ್ಲಿ ದೇಶದಲ್ಲಿ ಲಾಕ್ ಡೌನ್ ಹೇರಿದ್ದರಿಂದಾಗಿ ಇವರಿಗೆ ತಿನ್ನಲೂ ಏನು ಇಲ್ಲದಂತಾಗಿದೆ. ಗಲಾಟೆ ಹೆಚ್ಚಾಗುತ್ತಿದ್ದಂತೆ ಹೆಚ್ಚಿನ ಸಂಖ್ಯೆಯಲ್ಲಿ ಜಮಾವಣೆಗೊಂಡ ಪೊಲೀಸರು ಊರಿಗೆ ಕಳುಹಿಸಿಕೊಡುವ ಭರವಸೆ ನೀಡಿದ ಮೇಲೆ ಪ್ರತಿಭಟನೆಯನ್ನು ಕಾರ್ಮಿಕರು ನಿಲ್ಲಿಸಿದ್ದಾರೆ.