ಬೆಂಗಳೂರು: ಸಿಎಂ ಬಿ.ಎಸ್.ಯಡಿಯೂರಪ್ಪ ಕಸ್ತೂರಿರಂಗನ್ ವರದಿ ಜಾರಿ ಕುರಿತಂತೆ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ನಡೆಸಿದ ವಿಡಿಯೋ ಕಾನ್ಫರೆನ್ಸ್ ನಲ್ಲಿ ಭಾಗವಹಿಸಿ, ಪಶ್ಚಿಮ ಘಟ್ಟವನ್ನು ಸೂಕ್ಷ್ಮ ಪರಿಸರ ಪ್ರದೇಶವೆಂದು ಘೋಷಿಸುವ ಕುರಿತು ಚರ್ಚಿಸಿದರು.
ಈ ಕುರಿತು ರಾಜ್ಯದ ಅಭಿಪ್ರಾಯವನ್ನು ತಿಳಿಸಿದ ಬಿ.ಎಸ್.ಯಡಿಯೂರಪ್ಪ, ರಾಜ್ಯದಲ್ಲಿ ಗ್ರಾಮ ಪಂಚಾಯಿತಿಗಳು, ತಾಲ್ಲೂಕು ಪಂಚಾಯಿತಿಗಳು, ಜಿಲ್ಲಾ ಪಂಚಾಯಿತಿಗಳು, ವಿವಿಧ ಹಂತಗಳ ಜನಪ್ರತಿನಿಧಿಗಳು ಹಾಗೂ ಸಚಿವ ಸಂಪುಟವು ಕಸ್ತೂರಿ ರಂಗನ್ ವರದಿಯ ಕರಡು ಅಧಿಸೂಚನೆಯನ್ನು ಈಗಿರುವ ಸ್ವರೂಪದಲ್ಲಿ ತಿರಸ್ಕರಿಸಿವೆ. ಅದರಲ್ಲೂ ಸೂಕ್ಷ್ಮ ಪರಿಸರ ಪ್ರದೇಶ ಎಂದು ಘೋಷಿಸಿದ್ದನ್ನು ತಿರಸ್ಕರಿಸಿದ್ದಾರೆ ಎಂದು ಮಾಹಿತಿ ನೀಡಿದರು.
ಪ್ರತಿ ರಾಜ್ಯದ ಸಮಸ್ಯೆಗಳು, ಸವಾಲುಗಳು ಭಿನ್ನವಾಗಿರುವುದರಿಂದ ಭಾರತ ಸರ್ಕಾರವು ಎಲ್ಲ ರಾಜ್ಯಗಳಿಗೆ ಏಕರೂಪದ ಅಧಿಸೂಚನೆ ಹೊರಡಿಸುವುದು ಸರಿಯಲ್ಲ ಎಂದು ಇದೇ ವೇಳೆ ಅವರು ಕೇಂದ್ರ ಸಚಿವರಿಗೆ ಮನದಟ್ಟು ಮಾಡಿಕೊಡಲು ಯತ್ನಿಸಿದರು.
ಇದಕ್ಕೆ ಸಹಮತ ವ್ಯಕ್ತಪಡಿಸಿದ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್, ಪ್ರತಿ ರಾಜ್ಯಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರತ್ಯೇಕವಾಗಿ ಚರ್ಚಿಸುವುದಾಗಿ ತಿಳಿಸಿದರು.
ವಿಡಿಯೋ ಕಾನ್ಫರೆನ್ಸ್ ನಲ್ಲಿ ಅರಣ್ಯ ಸಚಿವ ಆನಂದ್ ಸಿಂಗ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಸಂದೀಪ್ ದವೆ, ಮಹಾರಾಷ್ಟ್ರ, ಕೇರಳ, ಗೋವಾ, ತಮಿಳುನಾಡು ಮತ್ತು ಗುಜರಾತ್ ರಾಜ್ಯದ ಮುಖ್ಯಮಂತ್ರಿಗಳು / ಸಚಿವರು, ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.