ಪಿಎಂ ಕೇರ್ಸ್ ಯಾರೊಬ್ಬರ ಮನೆಯ ಆಸ್ತಿಯಲ್ಲ: ಸಿದ್ದರಾಮಯ್ಯ

ಬೆಂಗಳೂರು: ದೇಶದ ಜನರ ದೇಣಿಗೆಯ ಪಿಎಂ ಕೇರ್ಸ್ ಫಂಡ್ (PMCaresFund) ಯಾರೊಬ್ಬರ ಮನೆಯ ಆಸ್ತಿ ಅಲ್ಲ. ಅದು ಈ ದೇಶದ ಪ್ರಜೆಗಳ ದುಡ್ಡು, ಅದು ಸದುಪಯೋಗವಾಗಬೇಕು ಎಂದು ಹೇಳುವ ಅಧಿಕಾರ ಪ್ರತಿಯೊಬ್ಬರಿಗೆ ಇದೆ. ಅದನ್ನೇ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ಸೋನಿಯಾಗಾಂಧಿಯವರು ಹೇಳಿದ್ದಾರೆ ತಪ್ಪೇನಿದೆ? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ನಮ್ಮ ಅಧ್ಯಕ್ಷರಾದ ಸೋನಿಯಾಗಾಂಧಿಯವರ ವಿರುದ್ಧ ದುರುದ್ದೇಶದಿಂದ ಎಫ್ಐಆರ್ ದಾಖಲಿಸಿದ ಸಾಗರದ ಪೊಲೀಸ್ ಅಧಿಕಾರಿ ಹದ್ದು ಮೀರಿ ವರ್ತಿಸಿದ್ದಾರೆ. ಕರ್ನಾಟಕದ ಸಿಎಂ ಬಿ.ಎಸ್.ಯಡಿಯೂರಪಪ್ಪ ಅವರೇ, ಅನಗತ್ಯ ರಾಜಕೀಯ ಸಂಘರ್ಷಕ್ಕೆ ಅವಕಾಶ ನೀಡದೆ ತಕ್ಷಣ ಈ ಎಫ್ಐಆರ್ ರದ್ದುಪಡಿಸಿ ಮತ್ತು ಅಧಿಕಾರಿಯನ್ನು ಅಮಾನತ್ ನಲ್ಲಿರಿಸಿ ಎಂದು ಅವರು ಒತ್ತಾಯಿಸಿದ್ದಾರೆ.
ಇತ್ತೀಚೆಗೆ ಕರ್ನಾಟಕ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಅಲ್ಲಲ್ಲಿ ಪೊಲೀಸರು ಮೊಕದ್ದಮೆ ದಾಖಲಿಸುತ್ತಿರುವುದು ನಡೆದಿದೆ. ಈ ರೀತಿ ನಮ್ಮ ಬಾಯಿ ಮುಚ್ಚಿಸಬಹುದು ಎಂದು ತಿಳಿದುಕೊಂಡಿದ್ದರೆ ಅದು ಮೂರ್ಖತನ. ಮುಂದಿನ ದಿನಗಳಲ್ಲಿ ನಮ್ಮ ಪ್ರಶ್ನೆಗಳು ಇನ್ನಷ್ಟು ಹರಿತವಾಗಲಿವೆ. ಸಂಘರ್ಷ ಇನ್ನಷ್ಟು ಬಿರುಸು ಪಡೆಯಲಿದೆ ಎಂದು ಅವರು ಹೇಳಿದ್ದಾರೆ.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಮ್ಮ ಸಮಯ ಮತ್ತು ಶ್ರಮವನ್ನು ಕೋವಿಡ್ -19 ಸೋಂಕನ್ನು ಎದುರಿಸಲು ಮತ್ತು ನೊಂದವರಿಗೆ ನೆರವಾಗಲು ವ್ಯಯ ಮಾಡಲಿ. ಈ ಕಷ್ಟದ ದಿನಗಳ ಅವಕಾಶವನ್ನು ದುರುಪಯೋಗ ಮಾಡಿಕೊಂಡು ವಿರೋಧ ಪಕ್ಷಗಳ ನಾಯಕರನ್ನು ಕಾರ್ಯಕರ್ತರನ್ನು ಹಣಿಯಲು ದುರುಪಯೋಗ ಮಾಡಿಕೊಳ್ಳಬೇಡಿ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಮ್ಮ ಅಧ್ಯಕ್ಷರಾದ ಸೋನಿಯಾಗಾಂಧಿಯವರು ವಿರೋಧ ಪಕ್ಷದ ನಾಯಕಿಯಾಗಿ ಜನಾಭಿಪ್ರಾಯವನ್ನು ಸರ್ಕಾರದ ಮುಂದಿಟ್ಟಿದ್ದಾರೆ. ಇದಕ್ಕೆ ಸ್ಪಂದಿಸುವುದು ಜವಾಬ್ದಾರಿಯುತ ಸರ್ಕಾರದ ಕರ್ತವ್ಯ ಎಂದು ಅವರು ಪ್ರತಿಪಾದಿಸಿದರು.
ಸೋನಿಯಾ ಗಾಂಧಿಯವರ ವಿರುದ್ಧ ದೂರು ನೀಡಿದವನು ರಾಜ್ಯ ಬಿಜೆಪಿ ಕಾರ್ಯಕರ್ತನಾಗಿದ್ದು, ರಾಜಕೀಯ ದುರುದ್ದೇಶದಿಂದಲೇ ಇದನ್ನು ಮಾಡಲಾಗಿದೆ ಎಂಬ ಬಗ್ಗೆ ಅನುಮಾನ ಇಲ್ಲ. ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಈ ಪ್ರಕರಣವನ್ನು ಸೌಹಾರ್ದಯುತವಾಗಿ ಬಗೆಹರಿಸದಿದ್ದಲ್ಲಿ ರಾಜಕೀಯ ಹೋರಾಟ ಅನಿವಾರ್ಯವಾಗಬಹುದು ಎಂದು ಅವರು ಸವಾಲೆಸೆದಿದ್ದಾರೆ.

Exit mobile version