ಪಕ್ಷಾಂತರಿಶಾಸಕರ ವಜಾ: ಸ್ಪೀಕರ್ ಗೆ ಅಧಿಕಾರ ಕೊಡಿ ಎಂದ ಸಿದ್ದು

ಬೆಂಗಳೂರು: ಪಕ್ಷಾಂತರ ನಿಷೇಧ ಕಾಯಿದೆ ನಿಯಮಗಳ ಮರುಪರಿಶೀಲನೆ ಸಂಬಂಧ ಅಭಿಪ್ರಾಯ ಸಂಗ್ರಹಿಸಲು ವಿಧಾನಸಭೆಯ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಇಂದು ಸಭೆ ನಡೆಸಿದರು.

ಸಭೆಯಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಕೆಲವು ನಾಯಕರು ಭಾಗವಹಿಸಿದ್ದರು. ಪಕ್ಷಾಂತರ ನಿಷೇಧ ಕಾಯಿದೆ ಅನ್ವಯ ಶಾಸಕರನ್ನು ಸದಸ್ಯತ್ವದಿಂದ ಅನರ್ಹಗೊಳಿಸುವ ಅಧಿಕಾರ ವಿಧಾನಸಭೆಯ ಅಧ್ಯಕ್ಷರಿಗೆ ಇರಬೇಕು. ಅನರ್ಹಗೊಂಡ ಶಾಸಕರು ಹತ್ತು ವರ್ಷ ಚುನಾವಣೆಗೆ ಸ್ಪರ್ಧಿಸದಂತೆ ಹಾಗೂ ಯಾವುದೇ ರಾಜಕೀಯ ಅಧಿಕಾರ ಅನುಭವಿಸದಂತೆ ನೋಡಿಕೊಳ್ಳಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಪ್ರಜಾಪ್ರಭುತ್ವದ ಬೇರುಗಳು ಗಟ್ಟಿಯಾಗಿರಬೇಕಾದರೆ ಪಕ್ಷಾಂತರವೆಂಬ ಪಿಡುಗು ನಿರ್ಮೂಲನೆ ಆಗಬೇಕು. ಪಕ್ಷಾಂತರ ನಿಷೇಧ ಕಾಯಿದೆ ಅನ್ವಯ ಪಕ್ಷಾಂತರ ಮಾಡುವ ಶಾಸಕರನ್ನು ಅನರ್ಹಗೊಳಿಸುವ ಸಭಾಧ್ಯಕ್ಷರ ಅಧಿಕಾರವನ್ನು ಕಸಿದು ಬೇರೆ ಸಂಸ್ಥೆ ಅಥವಾ ವ್ಯಕ್ತಿಗೆ ನೀಡಿದರೆ ನ್ಯಾಯ ಸಿಗುವ ವಿಶ್ವಾಸವಿರುವುದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಪಕ್ಷಾಂತರ ಎಂಬುದು ಸಂವಿಧಾನ ಬಾಹಿರವಾದದ್ದು. ಪಕ್ಷಾಂತರಿಗಳನ್ನು ಅನರ್ಹಗೊಳಿಸುವಂತೆ ಯಾರಾದರೂ ಅರ್ಜಿ ಸಲ್ಲಿಸಿದರೆ ಆ ಅರ್ಜಿಯನ್ನು ಕಾಲಮಿತಿಯೊಳಗೆ ಇತ್ಯರ್ಥ ಪಡಿಸುವಂತೆ ನೋಡಿಕೊಳ್ಳಬೇಕು. 2-3 ತಿಂಗಳೊಳಗೆ ಅರ್ಜಿ ವಿಲೇವಾರಿ ಆಗುವಂತೆ ನಿಯಮಾವಳಿಗಳಿಗೆ ತಿದ್ದುಪಡಿ ತರಬೇಕಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಪಕ್ಷಾಂತರದ ಮೂಲಕ ಚುನಾಯಿತ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸುವುದು ಮತದಾರರಿಗೆ ಮಾಡುವ ದ್ರೋಹ. ಹೀಗಾಗಿ ಅನರ್ಹರಾದವರು ಹತ್ತು ವರ್ಷ, ಅಂದರೆ ಎರಡು ಅವಧಿಗೆ ಚುನಾವಣೆಗೆ ಸ್ಪರ್ಧೆ ಮಾಡದಂತೆ, ಜೊತೆಗೆ ಯಾವುದೇ ರೀತಿಯಲ್ಲೂ ರಾಜಕೀಯ ಅಧಿಕಾರ ಅನುಭವಿಸದಂತೆ ನೋಡಿಕೊಳ್ಳಬೇಕಿದೆ ಎಂದು ಅವರು ಸಲಹೆ ನೀಡಿದ್ದಾರೆ.
ಅನರ್ಹರಾದವರು ಮರು ಚುನಾವಣೆಯಲ್ಲಿ ಗೆದ್ದು ಮಂತ್ರಿಗಳಾದರೆ ನೈತಿಕತೆ ಉಳಿಯುತ್ತದೆಯೇ? ಹತ್ತು ವರ್ಷಗಳ ಕಾಲ ಅಂಥವರು ಸದನವನ್ನೇ ಪ್ರವೇಶ ಮಾಡಬಾರದು. ಹಾಗಾಗಿ ನಿಯಮಾವಳಿಗಳಲ್ಲಿ ಬದಲಾವಣೆ ತರುವುದರ ಜೊತೆಗೆ ಚುನಾವಣಾ ಪ್ರಕ್ರಿಯೆಗಳಲ್ಲಿಯೂ ಸುಧಾರಣೆ ತರಬೇಕು ಎಂದು ಅವರು ಸಲಹೆ ನೀಡಿದ್ದಾರೆ.

Exit mobile version