ಬೆಂಗಳೂರು: ಗ್ರಾಮಪಂಚಾಯತ್ಗಳ ಚುನಾವಣೆಯನ್ನು ರಾಜ್ಯ ಚುನಾವಣಾ ಆಯೋಗ ಮುಂದೂಡಿರುವುದು ಕರ್ನಾಟಕ ಪಂಚಾಯತ್ ರಾಜ್ ಕಾಯ್ದೆ 1993ಕ್ಕೆ ಬಗೆದ ಅಪಚಾರ. ಈ ಪ್ರಜಾಪ್ರಭುತ್ವ ವಿರೋಧಿ ನಿರ್ಧಾರವನ್ನು ಕರ್ನಾಟಕ ಕಾಂಗ್ರೆಸ್ ನ್ಯಾಯಾಲಯದಲ್ಲಿ ಪ್ರಶ್ನಿಸಲಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟರ್ ಮೂಲಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಾಜ್ಯದ 6025 ಗ್ರಾಮಗಳಲ್ಲಿರುವ, 5,800 ಗ್ರಾಮಪಂಚಾಯಿತಿಗಳ ಅಧಿಕಾರಾವಧಿಯು ಇದೇ ಜೂನ್ – ಆಗಸ್ಟ್ 2020ರವರೆಗೆ ಮುಗಿಯಲಿದೆ. ಇದಕ್ಕೂ ಮುನ್ನ ರಾಜ್ಯದಲ್ಲಿ ನಡೆಯಬೇಕಿದ್ದ ಗ್ರಾ.ಪಂ. ಚುನಾವಣೆಯನ್ನು ರಾಜ್ಯ ಚುನಾವಣಾ ಆಯೋಗ ಮುಂದೂಡಿ ಆದೇಶ ಹೊರಡಿಸಿದೆ.
ಈ ಹಿನ್ನೆಲೆಯಲ್ಲಿ ಸರಣಿ ಟ್ವೀಟ್ ಗಳ ಮೂಲಕ ರಾಜ್ಯ ಸರ್ಕಾರದ ಕ್ರಮವನ್ನು ವಿರೋಧಿಸಿರುವ ಸಿದ್ದರಾಮಯ್ಯ, ಗ್ರಾಮಪಂಚಾಯತ್ ಚುನಾವಣೆಯನ್ನು ಮುಂದೂಡುವ ಮೂಲಕ ರಾಜ್ಯ ಚುನಾವಣಾ ಆಯೋಗ ಆಡಾಳಿತರೂಢ ಕರ್ನಾಟಕ ಬಿಜೆಪಿ ಹಾಕಿದ ತಾಳಕ್ಕೆ ತಕ್ಕ ಹಾಗೆ ಕುಣಿದಿದೆ. ಇದೊಂದು ಕೆಟ್ಟ ಸಂಪ್ರದಾಯ ಎಂದು ಅವರು ಆರೋಪಿಸಿದ್ದಾರೆ.
ರಾಜ್ಯ ಸರ್ಕಾರದ ದುರಾಡಳಿತದಿಂದ ಜನ ಬೇಸತ್ತು ಹೋಗಿದ್ದಾರೆ. ಚುನಾವಣೆ ಎದುರಿಸಲಾಗದ ಪುಕ್ಕಲು ಸರ್ಕಾರ ನಾಮನಿರ್ದೇಶನದ ಸದಸ್ಯರ ಮೂಲಕ ಅಡ್ಡಮಾರ್ಗದಲ್ಲಿ ಗ್ರಾಮಪಂಚಾಯತ್ ಮೇಲೆ ಸ್ವಾಮ್ಯ ಸ್ಥಾಪಿಸಲು ಹೊರಟಿರುವುದು ನಾಚಿಕೆಗೇಡಿನ ನಡವಳಿಕೆ ಎಂದು ಅವರು ಕಿಡಿಕಾರಿದ್ದಾರೆ.
ಚುನಾವಣೆ ಮುಂದೂಡಿಕೆ ನಮಗೆ ಅನಿರೀಕ್ಷಿತವೇನಲ್ಲ. ಇಂತಹದ್ದೊಂದು ಅನುಮಾನದಿಂದಲೇ ನಾವು ಚುನಾವಣಾ ಆಯುಕ್ತರನ್ನು ಭೇಟಿಯಾಗಿ ಮನವಿ ಮಾಡಿದ್ದೆವು. ನಮ್ಮ ಅನುಮಾನ ಈಗ ನಿಜವಾಗಿದೆ. ಇದರ ವಿರುದ್ಧ ಗ್ರಾಮಪಂಚಾಯತ್ ಮಟ್ಟದಲ್ಲಿಯೇ ಕೆಪಿಸಿಸಿ ಪ್ರತಿಭಟನೆ ನಡೆಸಲಿದೆ ಎಂದು ಅವರು ಹೇಳಿದ್ದಾರೆ.
ಕರ್ನಾಟಕ ಪಂಚಾಯತ್ ಕಾಯ್ದೆಯ ಸೆಕ್ಷನ್ 8ರ ಪ್ರಕಾರ ಗ್ರಾಮ ಪಂಚಾಯತ್ ಗಳಿಗೆ ಚುನಾವಣೆ ನಡೆಸದೆ ಆಡಳಿತ ಸಮಿತಿ ರಚಿಸುವಂತಿಲ್ಲ. ಈ ಅಕ್ರಮವನ್ನು ನ್ಯಾಯಾಲಯದ ಗಮನಕ್ಕೆ ತರುತ್ತೇವೆ. ಅಲ್ಲಿ ನ್ಯಾಯ ಸಿಗುವ ಸಂಪೂರ್ಣ ಭರವಸೆ ನಮಗಿದೆ ಎಂದು ಅವರು ಹೇಳಿದ್ದಾರೆ.
ಗ್ರಾ.ಪಂ. ಚುನಾವಣೆ ಮುಂದೂಡಿಕೆ: ಸಿದ್ದರಾಮಯ್ಯ ಅಸಮಾಧಾನ
