ಕಾರ್ಪೊರೇಟರ್ ವಿರುದ್ಧ ಪ್ರಕರಣ ದಾಖಲು!

ಬೆಂಗಳೂರು: ಪಾದರಾಯನಪುರ ಕಾರ್ಪೊರೇಟರ್ ಇರ್ಮಾನ್ ಪಾಷಾ ವಿರುದ್ಧ ಎಫ್ಐ ಆರ್ ದಾಖಲಾಗಿದೆ.

ಜೆಜೆ ನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 188 (ಸರ್ಕಾರಿ ಅಧಿಕಾರಿಗಳ ಕೆಲಸಕ್ಕೆ ಅಡ್ಡಿ), 270 (ವೈರಸ್ ಹಬ್ಬಿಸಲು ಯತ್ನ), 271 (ರೋಗ ನಿರೋಧಕ ನಿರ್ಬಂಧ ನಿಯಮವನ್ನು ಉಲ್ಲಂಘಿಸುವುದು) ಹಾಗೂ ಕ್ವಾರಂಟೈನ್ ನಿಯಮ ಉಲ್ಲಂಘನೆ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ.

ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆ ಇಮ್ರಾನ್ ಪಾಷಾ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಆರೋಗ್ಯಾಧಿಕಾರಿಗಳು ಪಾದರಾಯನಪುರಕ್ಕೆ ತೆರಳಿದ್ದರು. ಆದರೆ, ಈ ಸಂದರ್ಭದಲ್ಲಿ ಪಾಷಾ, ಉದ್ಧಟತನ ಮೆರೆದಿದ್ದರು. ಅಲ್ಲದೇ, ಇದರಿಂದಾಗಿ ಅವರ ಮನೆಯ ಸುತ್ತಮುತ್ತ ನೂರಾರು ಜನ ಸೇರುವಂತೆ ಮಾಡಿದ್ದರು. ಈ ಕುರಿತು ಆರೋಗ್ಯ ಅಧಿಕಾರಿಗಳು ಜೆಜೆ ನಗರ ಪೊಲೀಸರಿಗೆ ದೂರು ನೀಡಿದ್ದರು. ಆರೋಗ್ಯ ಅಧಿಕಾರಿಗಳ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಇಮ್ರಾನ್ ಪಾಷಾ ಆಸ್ಪತ್ರೆಗೆ ದಾಖಲು ನಿರಾಕರಿಸಿ ಹೈಡ್ರಾಮಾ ಸೃಷ್ಟಿಸಿದ್ದರು. ಮನೆಯ ಹತ್ತಿರ ಪೊಲೀಸರು, ಆರೋಗ್ಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು ಬಂದರೂ ಇಮ್ರಾನ್ ಪಾಷಾ ಮನೆಯಿಂದ ಹೊರಬಂದಿರಲಿಲ್ಲ.

ಕಾರ್ಪೊರೇಟರ್ ಇಮ್ರಾನ್ ತಂದೆ ಆರೀಫ್, ಶಾಸಕ ಜಮೀರ್ ಅಹ್ಮದ್ ಮಾತನ್ನೂ ಕೇಳಲಿಲ್ಲ. ಕೊನೆಗೆ ಪೊಲೀಸರು, ನೀವು ಆಸ್ಪತ್ರೆಗೆ ಬರಲಿಲ್ಲ ಅಂದ್ರೆ ಪ್ರಕರಣ ದಾಖಲಿಸಿ ಅರೆಸ್ಟ್ ಮಾಡ್ತೀವಿ ಎಂದು ವಾರ್ನಿಂಗ್ ಕೊಟ್ಟರು. ಸತತ ಮೂರು ಗಂಟೆಗಳ ಹೈಡ್ರಾಮಾ ಬಳಿಕ ಇಮ್ರಾನ್ ಪಾಷಾ ಪಿಪಿಇ ಕಿಟ್ ಸಮೇತ ಮನೆಯಿಂದ ಹೊರಬಂದು, ಜನರತ್ತ ಕೈ ಬೀಸಿ ಅಂಬುಲೆನ್ಸ್ ಹತ್ತಿ ವಿಕ್ಟೋರಿಯಾ ಆಸ್ಪತ್ರೆ ಸೇರಿದ್ದರು.

ಇಮ್ರಾನ್ ಪಾಷಾ 200ಕ್ಕೂ ಹೆಚ್ಚು ಜನರ ಜೊತೆ ಸಂಪರ್ಕದಲ್ಲಿದ್ದು, ಎಲ್ಲರನ್ನೂ ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗುತ್ತಿದೆ.

Exit mobile version