ಕೊಪ್ಪಳ: ಸಚಿವ ಸೋಮಣ್ಣ ಅವರ ಹೇಳಿಕೆ ಆರ್ಥಿಕತೆಯ ಬಗ್ಗೆ ಅವರಿಗಿರುವ ಅಜ್ಞಾನವನ್ನು ತೋರಿಸುತ್ತದೆ. ನಮ್ಮ ಸರ್ಕಾರದ ಅವಧಿಯಲ್ಲಿ ಆರ್ಥಿಕ ಶಿಸ್ತಿನಲ್ಲಿ ರಾಜ್ಯ ಮೊದಲ ಸ್ಥಾನದಲ್ಲಿತ್ತು. ಈಗ ಸರ್ಕಾರಿ ನೌಕರರಿಗೆ ಸಂಬಳ ಕೊಡಲು ಸರ್ಕಾರದ ಬಳಿ ಹಣವಿಲ್ಲ. ರಾಜ್ಯ ಮಾತ್ರವಲ್ಲ ಇಡೀ ದೇಶವೇ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಹಿಂದಿನ ಸರ್ಕಾರದ ಆರ್ಥಿಕ ಪರಿಸ್ಥಿತಿ ಕುರಿತು ಚಿತ್ರದುರ್ಗದಲ್ಲಿ ವಸತಿ ಸಚಿವ ಸೋಮಣ್ಣ ಮಾಡಿದ್ದ ಆರೋಪಕ್ಕೆ ಸಿದ್ದರಾಮಯ್ಯ ಕೊಪ್ಪಳದಲ್ಲಿ ತಿರುಗೇಟು ನೀಡಿದ್ದು, ಸಂವಿಧಾನೇತರ ಮುಖ್ಯಮಂತ್ರಿಯಾಗಿ ವಿಜಯೇಂದ್ರ ಇದ್ದಾರೆ ಅಂತ ಜನ ಹೇಳ್ತಿದ್ದಾರೆ. ಯಡಿಯೂರಪ್ಪ ಹೆಸರಿಗಷ್ಟೇ ಸಿಎಂ, ಬಹಳ ಜನ ಅಸಮಾಧಾನಿತ ಬಿಜೆಪಿ ಶಾಸಕರು ನನ್ನನ್ನು ಭೇಟಿಯಾಗಿ, ಸಹಜವಾಗಿ ತಮ್ಮ ಅಸಮಾಧಾನ ತೋಡಿಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.
ಕೊಪ್ಪಳದಲ್ಲಿ ಪ್ರಗತಿಪರರ ಮೇಲೆ ಕೇಸ್ ಹಾಕಿರುವುದನ್ನು ಖಂಡಿಸುತ್ತೇನೆ. ಸಂವಿಧಾನ, ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇರುವ ಯಾವ ಸರ್ಕಾರವೂ ಈ ರೀತಿ ಮಾಡುವುದಿಲ್ಲ. ಜನರ ಧ್ವನಿಯನ್ನು ಹತ್ತಿಕ್ಕುವುದು ಸರ್ವಾಧಿಕಾರಿ ಧೋರಣೆಯಾಗುತ್ತದೆ. ಸರ್ಕಾರ ತನ್ನ ಈ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಆಗ್ರಹಿಸುತ್ತೇನೆ ಎಂದು ಅವರು ಒತ್ತಾಯಿಸಿದ್ದಾರೆ.