ಹೈದರಾಬಾದ್: ಹೈದರಾಬಾದ್ ನ ಗಾಂಧಿ ಆಸ್ಪತ್ರೆಯಲ್ಲಿ ಕೊರೊನಾ ರೋಗಿ ಚಿಕಿತ್ಸೆ ಫಲಕಾರಿಯಾಗದೆ ಬಲಿಯಾದ ನಂತರ ವೈದ್ಯರ ಮೇಲೆ ಹಲ್ಲೆ ನಡೆಸಲಾಗಿದೆ. ಕರ್ತವ್ಯನಿರತ ವೈದ್ಯರ ಮೇಲೆ ಸಾರ್ವಜನಿಕರು ಕಬ್ಬಿಣದ ಸರಳಿನಿಂದ ಹಲ್ಲೆ ನಡೆಸಿದ್ದಾರೆ ಎಂದು ವೈದ್ಯರು ಆರೋಪಿಸಿದ್ದಾರೆ. ಜೊತೆಗೆ, ಕನಿಷ್ಠ ರಕ್ಷಣೆ ನೀಡಬೇಕೆಂದು ಒತ್ತಾಯಿಸಿದ ವೈದ್ಯರು ಪ್ರತಿಭಟನೆ ನಡೆಸಿದರು. ತಪ್ಪಿಸಸ್ಥರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು, ಎಫ್ ಐ ಆರ್ ದಾಖಲಿಸಬೇಕು ಎಂದು ಅವರು ಒತ್ತಾಯಿಸಿದರು.
ದಾಳಿ ಕುರಿತು ಪ್ರತಿಕ್ರಿಯಿಸಿದ ಪ್ರತಿಭಟನಾ ನಿರತ ವೈದ್ಯರು, ನಾವು ಓವರ್ ಟೈಮ್ ಕೆಲಸ ಮಾಡಿದ್ದೇವೆ, ಒತ್ತಡ ಅನುಭವಿಸಿದ್ದೇವೆ ಮತ್ತೀಗ ನಮ್ಮನ್ನು ಥಳಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕೊರೊನಾಗೆ ಚಿಕಿತ್ಸೆ ಪಡೆಯಲು 55 ವರ್ಷದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದರು. ಈ ವೇಳೆ ರೊಚ್ಚಿಗೆದ್ದ ಕುಟುಂಬಸ್ಥರ ಗುಂಪು ವೈದ್ಯರ ಮೇಲೆ ದಾಳಿ ನಡೆಸಿದೆ. ದಾಳಿ ನಡೆಸಿದ್ದರಿಂದ ಆಸ್ಪತ್ರೆಯಲ್ಲಿನ ವಸ್ತುಗಳೆಲ್ಲ ಚೆಲ್ಲಾಪಿಲ್ಲಿಯಾಗಿರುವ ದೃಶ್ಯಗಳು ಕಂಡುಬಂದಿವೆ.