ರಾಯಚೂರು: ಒಪೆಕ್ ಆಸ್ಪತ್ರೆಯನ್ನು ದುಃಸ್ಥಿತಿಯಿಂದ ಮುಕ್ತಗೊಳಿಸಿ ಅದನ್ನು ಗುಣಮಟ್ಟದ ಶ್ರೇಷ್ಠ ಆಸ್ಪತ್ರೆಯಾಗಿ ಪರಿವರ್ತಿಸಲು ಶ್ರಮಿಸುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಸಂಸ್ಥೆಯ ಆಡಳಿತ ಮಂಡಳಿಗೆ ಸೂಚನೆ ನೀಡಿದ್ದಾರೆ. ರಿಮ್ಸ್ ಮತ್ತು ಒಪೆಕ್ ಆಸ್ಪತ್ರೆಗೆ ಶನಿವಾರ ಭೇಟಿ ನೀಡಿದ್ದ ಅವರು ಪರಿಶೀಲನಾ ಸಭೆ ನಡೆಸಿದರು.
ಮಧ್ಯಾಹ್ನ ಮೂರು ಗಂಟೆ ನಂತರ ಯಾವುದೇ ಸೂಪರ್ ಸ್ಪೆಷಾಲಿಟಿ ವೈದ್ಯರು ಆಸ್ಪತ್ರೆಯಲ್ಲಿ ಇರುವುದಿಲ್ಲ ಎಂಬ ದೂರುಗಳಿವೆ. ದಿನದ 24 ತಾಸು ಎಲ್ಲಾ ವಿಭಾಗಗಳು ಕಾರ್ಯ ನಿರ್ವಹಿಸಬೇಕು. ಅಗತ್ಯವಿರುವ ಮಾನವ ಸಂಪನ್ಮೂಲ ಮತ್ತು ಇತರೆ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಅವರು ಭರವಸೆ ನೀಡಿದರು.
ಆಸ್ಪತ್ರೆ ಇಂಥ ದುಃಸ್ಥಿತಿಯಲ್ಲಿ ಇದೆ ಎಂದು ಭಾವಿಸಿರಲಿಲ್ಲ. ಒಪೆಕ್ ಆಸ್ಪತ್ರೆಯಲ್ಲಿನ ಎಲ್ಲಾ ಲೋಪಗಳನ್ನು ಸರಿಪಡಿಸಿ ಅತ್ಯುತ್ತಮ ಆಸ್ಪತ್ರೆಯನ್ನಾಗಿ ಪರಿವರ್ತಿಸಬೇಕು ಎಂದು ವೈದ್ಯರು ಮತ್ತು ಆಡಳಿತ ವರ್ಗಕ್ಕೆ ನಿರ್ದೇಶನ ನೀಡಿದರು.
ಆರಂಭದಲ್ಲಿ ರಿಮ್ಸ್ ಆಡಳಿತ ವೈಖರಿ ಪರಿಶೀಲಿಸಿದ ಅವರು, ಯಾವುದೇ ನಿರ್ಮಾಣ ಕಾಮಗಾರಿ ಆರಂಭಿಸುವ ಮೊದಲು ತಮ್ಮ ಕಚೇರಿ ಮತ್ತು ಸ್ಥಳೀಯ ಚುನಾಯಿತ ಪ್ರತಿನಿಧಿಗಳ ಗಮನಕ್ಕೆ ತರಬೇಕು. ವೈದ್ಯಕೀಯ ಉಪಕರಣಗಳ ಖರೀದಿಗೆ ಮೊದಲು ನಿರ್ದಿಷ್ಟ ಮಾರ್ಗಸೂಚಿಗಳ ಜೊತೆಗೆ ನಿರ್ದೇಶಕರ ಹಂತದಲ್ಲಿ ತಜ್ಞರ ಸಮಿತಿ ರಚಿಸಬೇಕು ಎಂದು ಸಲಹೆ ನೀಡಿದರು.
ಯಾವುದೇ ಕಾರಣಕ್ಕೂ ಕಳಪೆ ಉಪಕರಣಗಳ ಖರೀದಿಗೆ ಅವಕಾಶವಿಲ್ಲದಂತೆ ಶ್ರೇಷ್ಠ ಗುಣಮಟ್ಟದ ಕಂಪನಿಗಳಿಗೆ ಮಾತ್ರ ಅವಕಾಶ ಇರುವಂತೆ ಎಚ್ಚರವಹಿಸಬೇಕು ಎಂದು ತಾಕೀತು ಮಾಡಿದರು.
ಉಪಕರಣ ಗುತ್ತಿಗೆ ಪಡೆದ ಕಂಪನಿಗಳು ಸಮರ್ಪಕ ಸೇವೆ ನೀಡಲು ಅಗತ್ಯ ಸೂಚನೆ ನೀಡಬೇಕು. ಇಲ್ಲವೇ ಮಾರ್ಗಸೂಚಿ ಬದಲಿಸಿ ಎಂದು ಡಿಎಂಇಗೆ ಸೂಚನೆ ನೀಡಿದರು.
ನೇಮಕ ಪ್ರಕ್ರಿಯೆ ಕುರಿತು ನಿರ್ದೇಶನ ನೀಡಿದ ಸುಧಾಕರ್
ಖಾಲಿ ಇರುವ 49 ಬೋಧಕ ಹುದ್ದೆಗಳನ್ನು ಆದ್ಯತೆ ಮೇರೆಗೆ ಭರ್ತಿ ಮಾಡುವ ನಿಟ್ಟಿನಲ್ಲಿ ಒಂದು ತಿಂಗಳಲ್ಲಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸಚಿವರು ಸೂಚಿಸಿದರು. ಅಲ್ಲಿಯವರೆಗೆ ತಾತ್ಕಾಲಿಕ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಹೇಳಿದರು.
ಗ್ರೂಪ್ ಬಿ ಯ 4 ಹುದ್ದೆಗಳನ್ನು ಕೂಡಲೇ ಭರ್ತಿ ಮಾಡುವಂತೆ ಸೂಚನೆ ನೀಡಿದ ಸಚಿವರು, ಗ್ರೂಪ್ ಸಿ ಮತ್ತು ಡಿ ವರ್ಗದ ನೇಮಕಕ್ಕೆ ಅನುಕೂಲ ಆಗುವಂತೆ ವೃಂದ ಮತ್ತು ನೇಮಕ ನಿಯಮಗಳನ್ನು ಶೀಘ್ರವಾಗಿ ಅಂತಿಮಗೊಳಿಸಲಾಗುವುದು ಎಂದು ಸ್ಪಷ್ಟಪಡಿಸಿದರು.
ಆಡಳಿತದ ವೈಫಲ್ಯಗಳು ಮರುಕಳಿಸದಂತೆ ಜಾಗ್ರತೆವಹಿಸಿ ಮೊದಲ ಹಂತದ ಅಧಿಕಾರಿಗಳು ಸಮನ್ವಯದಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಎಚ್ಚರಿಕೆ ನೀಡಿದರು.
ಆಯುಷ್ಮಾನ್ ಭಾರತ ಅಡಿ ವಾರ್ಷಿಕ ಪಡೆಯುತ್ತಿರುವ ಅನುದಾನ ಹೆಚ್ಚಿಸುವ ನಿಟ್ಟಿನಲ್ಲಿ ವಿಭಾಗಗಳ ಮುಖ್ಯಸ್ಥರು ಕಾರ್ಯವೈಖರಿ ಬದಲಿಸಿಕೊಂಡು ಆಯಾ ದಿನದ ಚಿಕಿತ್ಸೆ ವಿವರಗಳನ್ನು ದಾಖಲು ಮಾಡಿ ಕಳುಹಿಸಬೇಕು. ಇದನ್ನು ಪ್ರತಿ ತಿಂಗಳು ಪರಿಶೀಲಿಸಿ, ಗುರಿ ತಲುಪದ ವಿಭಾಗಗಳ ಮುಖ್ಯಸ್ಥರನ್ನು ಹೊಣೆ ಮಾಡಲಾಗುವುದು ಎಂದರು.
ಹಟ್ಟಿ ಚಿನ್ನದ ಗಣಿ ಸೇರಿದಂತೆ ಇತರೆ ಕಂಪನಿಗಳನ್ನು ಸಂಪರ್ಕಿಸಿ ಸಿ ಎಸ್ ಆರ್ ನಿಧಿಯ ನೆರವು ಪಡೆದುಕೊಳ್ಳಲು ಪ್ರಯತ್ನ ನಡೆಸಬೇಕು ಎಂದು ಸಲಹೆ ನೀಡಿದರು.

Leave a Reply

Your email address will not be published. Required fields are marked *

You May Also Like

ಸಾರಿಗೆ ಸಿಬ್ಬಂದಿಗಳಿಗೆ ಸಂಬಳವೇ ಇಲ್ಲ! ಇನ್ನು ದೀಪಾವಳಿ ಆಚರಣೆ ಹೇಗೆ?

ನಾಡಿನಲ್ಲಿ ಪ್ರಮುಖವಾಗಿ ಆಚರಿಸುವ ದೊಡ್ಡ ಹಬ್ಬಗಳಲ್ಲಿ ದೀಪಾವಳಿಯೂ ಒಂದು. ಆದರೆ ಬೆಳಕಿನ ಹಬ್ಬ ಸಾರಿಗೆ ಸಿಬ್ಬಂದಿಗಳಿಗೆ ಮಾತ್ರ ಕತ್ತಲಲ್ಲಿಟ್ಟಂತಾಗಿದೆ.

ಶನಿವಾರ ಒಂದೇ ದಿನ ದಾಖಲೆಯ ಸೋಂಕಿತರು ಪತ್ತೆ!!

ಶನಿವಾರ ಒಂದೇ ದಿನ ದಾಖಲೆಯ ಸೋಂಕಿತರು ಪತ್ತೆ!! ನವದೆಹಲಿ : ದೇಶದಲ್ಲಿ ಶನಿವಾರ ಒಂದೇ ದಿನ…

ಯೋಧನ ಸಮಯ ಪ್ರಜ್ಞೆಯಿಂದ ಕರುಳು ಬಳ್ಳಿ ಸೇರಿದ ಅಜ್ಜಿ..!

ಅರ್ಥವಾಗದ ಊರು, ತಿಳಿದ ಭಾಷೆಯ ಮದ್ಯೆ ಏಕಾಂಗಿಯಾದ ಅಜ್ಜಿ ತನ್ನವರಿಗಾಗಿ ಅಳುತ್ತಿದ್ದಳು. ಅಜ್ಜಿಯ ಆರ್ಥನಾದ ಅಲ್ಲಿರುವ ಯಾರ ಗಮನಕ್ಕೂ ಬರಲೇ ಇಲ್ಲ. ಕಣ್ಣೀರಿಡುತ್ತಿದ್ದ ಇಳಕಲ್ ಸೀರೆಯುಟ್ಟ ಹಿರಿಯ ಜೀವ ಕರುನಾಡಿನವಳುವೆಂದರಿತಯೋಧ ಅಜ್ಜಿಯ ಆರ್ಥನಾದಕ್ಕೆ ಧ್ವನಿಯಾಗಿದ್ದಾರೆ. ತನ್ನವರನ್ನು ಕಳೆದುಕೊಂಡ ಅಜ್ಜಿಗೆ ತನ್ನ ಬಂಧು ಬಳಗದೊಂದಿಗೆ ತಳುಕು ಹಾಕುವ ಮೂಲಕ ಜಿಲ್ಲೆಯ ಮುಂಡರಗಿ ಸೈನಿಕ ಜನರ ಮೆಚ್ಚುಗೆಯ ಜೊತೆಗೆ ಸೈ ಎನಿಸಿಕೊಂಡಿದ್ದಾರೆ.

15 ತಿಂಗಳ ಮಗುವನ್ನು ಮನೆಯಲ್ಲಿಯೇ ಬಿಟ್ಟು ಕೊರೊನಾ ವಿರುದ್ಧ ಹೋರಾಡುತ್ತಿರುವ ತಾಯಿ!

ಕೊರೊನಾ ವಾರಿಯರ್ಸ್ ತಮ್ಮ ಜೀವವನ್ನೇ ಮುಡಿಪಾಗಿಟ್ಟು ಕೆಲಸ ಮಡುತ್ತಿದ್ದಾರೆ. ಇಲ್ಲೊಬ್ಬರು ಸ್ಟಾಫ್ ನರ್ಸ್ ತಮ್ಮ 15 ತಿಂಗಳ ಹಸುಗೂಸನ್ನು ಮನೆಯಲ್ಲಿಯೇ ಬಿಟ್ಟು ಕೊರೊನಾ ವಿರುದ್ಧ ಹೋರಾಡುತ್ತಿದ್ದು, ವಾರಿಯರ್ಸ್ ನಡುವೆಯೇ ಮಾದರಿಯಾಗಿದ್ದಾರೆ.