ಹಳ್ಳಿ ಹಕ್ಕಿಯನ್ನು ತಬ್ಬಲಿ ಮಾಡಿತೆ ಬಿಜೆಪಿ..?

ಬೆಂಗಳೂರು: ಮೇಲ್ಮನೆಗೆ ನಡೆಯುವ ಚುನಾವಣೆಗೆ ಬಿಜೆಪಿ ತಡರಾತ್ರಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ಇಂದು ನಾಲ್ವರು ನಾಮಪತ್ರ ಸಲ್ಲಿಸಲಿದ್ದಾರೆ. ಆದರೆ, ಹಳ್ಳಿ ಹಕ್ಕಿ ಎಚ್. ವಿಶ್ವನಾಥ್ ಗೆ ಪಕ್ಷ ಕೈ ಕೊಟ್ಟಿದೆ.

ಎಂಟಿಬಿ ನಾಗರಾಜ್, ಆರ್.ಶಂಕರ್, ಸುನಿಲ್ ವಲ್ಯಾಪುರೆ ಮತ್ತು ಪ್ರತಾಪ್ ಸಿಂಹ ನಾಯಕ್ ಗೆ ಟಿಕೆಟ್ ಸಿಕ್ಕಿದೆ. ಮೈತ್ರಿ ಸರ್ಕಾರ ಪತನಕ್ಕೆ ಕಾರಣವಾಗಿದ್ದ ಎಂಟಿಬಿ ನಾಗರಾಜ್, ಆರ್.ಶಂಕರ್ ಗೆ ನೀಡಿದ ಮಾತನ್ನು ಸಿಎಂ ಯಡಿಯೂರಪ್ಪ ಉಳಿಸಿಕೊಂಡಿದ್ದಾರೆ. ಆದರೆ ವಿಶ್ವನಾಥ್ ಅವರಿಗೆ ಟಿಕೆಟ್ ಕೊಡಿಸುವಲ್ಲಿ ಸಿಎಂ ವಿಫಲವಾಗಿದ್ದಾರೆ.

ಹೊಸಕೋಟೆಯ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಹೊರಬಂದ ಶರತ್ ಬಚ್ಚೇಗೌಡ ಪಕ್ಷೇತರ ಅಭ್ಯರ್ಥಿಯಾಗಿ ಗೆಲುವು ಕಂಡಿದ್ದರು. ಹೀಗಾಗಿ ಎಂಟಿಬಿ ನಾಗರಾಜ್ ಅವರಿಗೆ ಟಿಕೆಟ್ ಸಿಕ್ಕಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಆರ್.ಶಂಕರ್ ಉಪಚುನಾವಣೆಯಲ್ಲಿ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ಕ್ಷೇತ್ರವನ್ನು ಬಿಜೆಪಿಯ ಹೈಕಮಾಂಡ್ ಆದೇಶದಂತೆ ಅರುಣ್ ಕುಮಾರ್ ಅವರಿಗೆ ತ್ಯಾಗ ಮಾಡಿದ ಪ್ರತಿಫಲವಾಗಿ ಟಿಕೆಟ್ ಲಭ್ಯವಾಗಿದೆ.

ಸಿಎಂ ಯಡಿಯೂರಪ್ಪ ಆಪ್ತ ಸುನಿಲ್ ವಲ್ಯಾಪುರೆ ಸಹ ಸಂಸದ ಉಮೇಶ್ ಜಾಧವ್ ಪುತ್ರ ಅವಿನಾಶ್ ಜಾಧವ್ ಗಾಗಿ ಚಿಂಚೋಳಿ ಕ್ಷೇತ್ರ ತ್ಯಾಗ ಮಾಡಿದ್ದರು. ಈ ಹಿನ್ನೆಲೆ ಟಿಕೆಟ್ ಸಿಕ್ಕಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಪ್ತ, ದಕ್ಷಿಣ ಕನ್ನಡದ ಬಿಜೆಪಿ ಜಿಲ್ಲಾಧ್ಯಕ್ಷ ಪ್ರತಾಪ್ ಸಿಂಹ ನಾಯಕ್ ಅವರಿಗೆ ಟಿಕೆಟ್ ಲಭ್ಯವಾಗಿದೆ. ಪ್ರತಾಪ್ ಸಿಂಹ ನಾಯಕ್ ಆರ್.ಎಸ್.ಎಸ್ ಹಿನ್ನೆಲೆ ಹೊಂದಿದ್ದಾರೆ. ಆದರೆ, ಸದ್ಯ ವಿಶ್ವನಾಥ್ ಅವರಿಗೆ ಟಿಕೆಟ್ ಸಿಗದ ಕಾರಣ ಬಿಜೆಪಿ ಪಾಳಯದಲ್ಲಿ ಹಾಗೂ ಪಕ್ಷ ತೊರೆದು ಬಂದ ನಾಯಕರಲ್ಲಿ ಸಹಜವಾಗಿ ಅಸಮಾಧಾನ ಭುಗಿಲೇಳುವ ಸಾಧ್ಯತೆ ಇದೆ.

Exit mobile version