ಬೆಂಗಳೂರು: ಕೊರೊನಾ ಸೋಂಕು ತಡೆಗಟ್ಟಲು ಕರ್ನಾಟಕ ಸಿಎಂ ಬಿ.ಎಸ್.ಯಡಿಯೂರಪ್ಪ ಕೈಗೊಂಡ ಕ್ರಮಗಳು ಮತ್ತು ಮಾಡಿರುವ ಖರ್ಚು-ವೆಚ್ಚಗಳು ಪಾರದರ್ಶಕವಾಗಿಲ್ಲ. ಈ ಬಗ್ಗೆ ಶ್ವೇತಪತ್ರವನ್ನು ಹೊರಡಿಸಿ ಆತಂಕ ಅಸುರಕ್ಷತೆ, ಅಭದ್ರತೆಯಲ್ಲಿರುವ ಜನರಲ್ಲಿ ವಿಶ್ವಾಸವನ್ನು ತುಂಬುವ ಕೆಲಸ ಮಾಡಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಒತ್ತಾಯಿಸಿದ್ದಾರೆ.

ಈ ಕುರಿತು ಇಂದು ಸರಣಿ ಟ್ವೀಟ್ ಮಾಡಿರುವ ಅವರು, ಕೊರೊನಾ ನಿಯಂತ್ರಣಕ್ಕೆ ರಾಜ್ಯದ ಖಜಾನೆಯಿಂದ ಎಷ್ಟು ಖರ್ಚಾಗಿದೆ? ಅದು ಯಾವ ಉದ್ದೇಶಗಳಿಗೆ ಖರ್ಚಾಗಿದೆ? ಇದರಲ್ಲಿ ಕ್ವಾರಂಟೈನ್, ಚಿಕಿತ್ಸೆ, ಪಿಪಿಇ, ವೆಂಟಿಲೇಟರ್, ಆಮ್ಲಜನಕ ಸಿಲಿಂಡರ್, ಮಾಸ್ಕ್, ಸ್ಯಾನಿಟೈಸರ್ ಸೇರಿದಂತೆ ಮತ್ತಿತರ ವೈದ್ಯಕೀಯ ಸಲಕರಣೆ ಮತ್ತು ಚಿಕಿತ್ಸೆಗೆ ಖರ್ಚಾದ ಹಣ ಎಷ್ಟು? ಎಂದು ಪ್ರಶ್ನಿಸಿದ್ದಾರೆ.

ಕೇಂದ್ರ ಸರ್ಕಾರದಿಂದ ಬಂದಿರುವ ದುಡ್ಡು ಮತ್ತು ವೈದ್ಯಕೀಯ ಸಲಕರಣೆಗಳೆಷ್ಟು? ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆಗೆ ಮೀಸಲಿಟ್ಟಿರುವ ಹಾಸಿಗೆಗಳೆಷ್ಟು? ಯಾವ ಮಾನದಂಡದ ಆಧಾರದಲ್ಲಿ ಖಾಸಗಿ ಆಸ್ಪತ್ರೆಗಳ ಶುಲ್ಕ ನಿಗದಿಪಡಿಸಿದೆ? – ಈ ವಿವರಗಳನ್ನು ರಾಜ್ಯ ಸರ್ಕಾರ ಜನತೆಯ ಮುಂದಿಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಕೊರೊನಾ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳೇನು..?
ಕೊರೊನಾ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ವಿವರ ಕೇಳಿ ನಾನು ಹಲವಾರು ಪತ್ರಗಳನ್ನು ಬರೆದಿದ್ದರೂ ಕರ್ನಾಟಕ ಸಿಎಂ ಮಾಹಿತಿ ಕೊಡುತ್ತಿಲ್ಲ. ಮಾಹಿತಿ ನಿರಾಕರಣೆ ನನ್ನ ಹಕ್ಕು ಚ್ಯುತಿಯಾಗುವುದು ಮಾತ್ರವಲ್ಲ ಸರ್ಕಾರದ ಕಾರ್ಯವೈಖರಿ ಬಗ್ಗೆ ಅನುಮಾನ ಮೂಡಿಸುತ್ತದೆ ಎಂದು ಅವರು ಹೇಳಿದ್ದಾರೆ.

ಮಾರ್ಚ್ 23ರಂದು ರಾಜ್ಯದಲ್ಲಿ ಲಾಕ್ ಡೌನ್ ಘೋಷಿಸಿದಾಗ ರಾಜ್ಯದಲ್ಲಿ ಸಾವು ಸಂಭವಿಸಿರಲಿಲ್ಲ, 26 ಮಂದಿ ಸೋಂಕಿತರಷ್ಟೇ ಇದ್ದರು. ಇಂದಿನ ವರದಿಯ ಪ್ರಕಾರ ಸೋಂಕಿತರ ಸಂಖ್ಯೆ 11,923, ಸಾವಿನ ಸಂಖ್ಯೆ 191 ದಾಟಿದೆ. ಎಲ್ಲಿದೆ ನಿಯಂತ್ರಣ? ಎಂದು ಅವರು ಪ್ರಶ್ನಿಸಿದ್ದಾರೆ.

ಸಿಎಂ ನಿಷ್ಕ್ರಿಯತೆ..!
ಕೊರೊನಾ ದಿಢೀರನೇ ಬಂದೆರಗಿಲ್ಲ, ಕಳೆದ ಮೂರು ತಿಂಗಳ ಅವಧಿಯನ್ನು ಕೇವಲ ಲಾಕ್‌ಡೌನ್ ಹೇರಿಕೆ ಮತ್ತು ಹಿಂತೆಗೆತದಲ್ಲಿ ವ್ಯರ್ಥವಾಗಿ ಕಳೆದ ಕರ್ನಾಟಕ ಸಿಎಂ, ಯಾವ ತಯಾರಿಯನ್ನೂ ನಡೆಸಿಲ್ಲ. ಈ ನಿಷ್ಕ್ರಿಯತೆಯ ಫಲವನ್ನು ರಾಜ್ಯದ ಜನತೆ ಅನುಭವಿಸಿದಂತಾಗಿದೆ ಎಂದು ಅವರು ಕಿಡಿಕಾರಿದ್ದಾರೆ.

ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗಳು ತುಂಬಿ ಹೋಗಿವೆ. ಖಾಸಗಿ ಆಸ್ಪತ್ರೆಗಳು ಸರ್ಕಾರ ಒಪ್ಪಿಕೊಂಡಿರುವ ಚಿಕಿತ್ಸಾ ಶುಲ್ಕಕ್ಕೆ ಚಿಕಿತ್ಸೆ ನೀಡಲು ನಿರಾಕರಿಸುತ್ತಿವೆ. ಅವರನ್ನು ಕರ್ನಾಟಕ ಸಿಎಂ ಒಪ್ಪಿಸಬೇಕು, ಇಲ್ಲವೇ ಅವರ ವಿರುದ್ಧ ಕ್ರಮಕೈಗೊಳ್ಳಬೇಕು. ಎರಡನ್ನೂ ಮಾಡದೆ ಕೈಕಟ್ಟಿ ಕುಳಿತರೆ ಜನರೇನು ಮಾಡಬೇಕು? ಎಂದು ಅವರು ಪಶ್ನಿಸಿದ್ದಾರೆ.

ಕೊರೊಮಾ ಪರೀಕ್ಷೆಯಲ್ಲಿ ಇಳಿಕೆ.!
ಕೊರೊನಾ ಸೋಂಕು ನಗರ-ಪಟ್ಟಣಗಳಿಂದ ಹಳ್ಳಿಗಳಿಗೆ ಹರಡಿದೆ. ಆದರೆ ಕಳೆದ 15 ದಿನಗಳಿಂದ ಪರೀಕ್ಷೆ ಮಾಡುವ ಪ್ರಮಾಣ 16 ಸಾವಿರದಿಂದ ಸರಾಸರಿ 11,000ಕ್ಕೆ ಇಳಿದಿದೆ. ಸೋಂಕು ಸಮುದಾಯಕ್ಕೆ ವ್ಯಾಪಿಸಿಕೊಂಡಿರುವ ಭೀತಿ ಇದೆ. ಏನಾಗಿದೆ ಸರ್ಕಾರಕ್ಕೆ? ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

ವೆಂಟಿಲೇಟರ್ ಗಳ ಕೊರತೆ ಇದೆ.!
ರಾಜ್ಯಕ್ಕೆ 9,200 ವೆಂಟಿಲೇಟರ್ ಬೇಕಾಗಿವೆ. ಇರುವುದು 1,500 ಮಾತ್ರ. ಕೇಂದ್ರ ಸರ್ಕಾರಕ್ಕೆ 33,000 ವೆಂಟಿಲೇಟರ್ ಕಳಿಸಲು ಕೇಳಿದರೆ ಬಂದಿರುವುದು 90 ಮಾತ್ರ. 20,000 ಆಕ್ಸಿಜನೇಟೆಡ್ ವೆಂಟಿಲೇಟರ್ ಬೇಕಾಗಿದ್ದು, ಕೇವಲ 7000 ಮಾತ್ರ ಇವೆ. ಇದೆನಾ ತಯಾರಿ? ಎಂದಿದ್ದಾರೆ.

ವೈದ್ಯಕೀಯ ಸಲಕರಣೆಗಳ ಖರೀದಿ ಬಗ್ಗೆ ಸ್ಪಷ್ಟನೆ ನೀಡಿ..
ವೈದ್ಯಕೀಯ ಸಲಕರಣೆಗಳ ಖರೀದಿಯಲ್ಲಿ ಅಂದಾಜು 3,300 ಕೋಟಿ ರೂ.ಗಳ ಅವ್ಯವಹಾರ ನಡೆದಿದ್ದು, ಮಾರುಕಟ್ಟೆ ದರಕ್ಕಿಂತ ಎರಡು ಪಟ್ಟು ಹೆಚ್ಚಿಗೆ ಪಾವತಿಸಿ ಖರೀದಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಇದನ್ನು ಆರ್ಥಿಕ ಇಲಾಖೆ ಆಕ್ಷೇಪಿಸಿದೆ. ಈ ಬಗ್ಗೆ ಕರ್ನಾಟಕ ಸಿಎಂ ಸ್ಪಷ್ಟನೆ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಶ್ವೇತಪತ್ರ ಹೊರಡಿಸಿ..
ಕೊರೊನಾ ನಿಯಂತ್ರಣದ ಕ್ರಮಗಳ ಬಗ್ಗೆ ಕರ್ನಾಟಕ ಸಿಎಂ ತಕ್ಷಣ ಶ್ವೇತಪತ್ರ ಹೊರಡಿಸಿ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸೋಂಕು ನಿಯಂತ್ರಣದಲ್ಲಿ ತೊಡಗಿಸಿಕೊಳ್ಳಬೇಕು. ಸರ್ಕಾರ ಇದೇ ರೀತಿಯ ಉದಾಸೀನತೆ -ಉಡಾಫೆತನವನ್ನು ಮುಂದುವರಿಸಿದರೆ ಬೀದಿಗಿಳಿದು ಹೋರಾಟ ನಡೆಸುವುದು ಅನಿವಾರ್ಯವಾಗಬಹುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಗ್ರಾಮ ಪಂಚಾಯಿತಿ ಚುನಾವಣೆ ದಿನಾಂಕ ನಿಗದಿ: ಎರಡು ಹಂತದಲ್ಲಿ ಚುನಾವಣೆ

ರಾಜ್ಯದಲ್ಲಿ ಈಗಾಗಲೇ ಹಳ್ಳಿ ಫೈಟ್ ಗೆ ದಿನಾಂಕ ಯಾವಾಗ ಎನ್ನುವ ಕುತೂಹಲ ಬಹುತೇಕರಲ್ಲಿತ್ತು. ಆದರೆ ಇಂದು ಕೊನೆಗೂ ಚುನಾವಣಾ ಆಯೋಗ ಮೂಹುರ್ತ ಫಿಕ್ಸ್ ಮಾಡಿದ್ದು, ಚುನಾವಣೆ ದಿನಾಂಕಕ್ಕೆ ಎದುರು ನೋಡುತ್ತಿದ್ದವರ ಸಂತಸಕ್ಕೆ ಕಾರಣವಾಗಿದೆ

ಕೊರೋನಾ ಸೋಂಕು ಹರಡುತ್ತಿರುವುದರ ಹಿಂದಿನ ಕ್ವಾರಂಟೈನ್ ಕಥೆ ಏನು ಗೊತ್ತಾ..!

ಈಗಾಗಲೇ ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚತ್ತಲಿದ್ದು ಜನರಲ್ಲಿ ಸಹಜವಾಗಿಯೇ ಆತಂಕ ಮನೆಮಾಡಿದೆ. ಆದರೆ ಕೊರೋನಾ ಸೋಂಕು ಇನ್ನೇನು ನಿಯಂತ್ರಣಕ್ಕೆ ಬರುತ್ತದೆ ಎನ್ನುವಷ್ಟರಲ್ಲಿ ವಲಸಿಗರಿಗೆ ವಿನಾಯಿತಿ ನೀಡಲಾಯಿತು. ಇದು ಒಂದು ರೀತಿಯಿಂದ ಸೋಂಕು ಮತ್ತಷ್ಟು ಹರಡಲು ಕಾರಣವಾಯಿತು ಎನ್ನಬಹುದು.

ರಾಜ್ಯ ಸರ್ಕಾರಿ ನೌಕರರ ಡಿಎ ಗೆ ಕತ್ತರಿ..!

ಲಾಕ್‌ಡೌನ್ ಪರಿಣಾಮ ಸರ್ಕಾರದ ಬೊಕ್ಕಸಕ್ಕೆ ಭಾರಿ ಪೆಟ್ಟು ನೀಡಿದೆ. ಇದರಿಂದಾಗಿ ಸರ್ಕಾರ ಕೂಡ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಈ ಕಾರಣದಿಂದ ರಾಜ್ಯ ಸರ್ಕಾರ ನೌಕರರ ಡಿಎಗೆ ಕತ್ತರಿ ಹಾಕಲಿದೆ..?