ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ನಿಂದ ಪ್ರತಿಭಟನೆ!


ಬೆಂಗಳೂರು : ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಈ ಮಧ್ಯೆ ತೈಲ ಬೆಲೆ ಗಗನಕ್ಕೆ ಏರಿಕೆಯಾಗಿದೆ. ಇದನ್ನು ಖಂಡಿಸಿ ಕಾಂಗ್ರೆಸ್ ತೀವ್ರ ಪ್ರತಿಭಟನೆ ನಡೆಸಿದೆ.
ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವರು ಭಾಗವಹಿಸಿದ್ದರು. ನಾಯಕರ ಜೊತೆ ನೂರಾರು ಕಾರ್ಯಕರ್ತರು ಸೈಕಲ್‌ ತುಳಿದ ಪರಿಣಾಮ ಕೆಪಿಸಿಸಿ ಕಚೇರಿ ಇರುವ ಕ್ವೀನ್ಸ್‌ ರಸ್ತೆಯಲ್ಲಿ ಟ್ರಾಫಿಕ್‌ ಜಾಮ್‌ ಆಗಿತ್ತು. ಈ ಸಂದರ್ಭದಲ್ಲಿ ಸಾಮಾಜಿಕ ಅಂತರದ ನಿಯಮವೇ ಉಲ್ಲಂಘನೆ ಆಗಿತ್ತು.
ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್‌ ಬೈಕನ್ನು ಚಟ್ಟಕ್ಕೆ ಕಟ್ಟಿ ಎತ್ತಿಕೊಂಡು ಶವದಂತೆ ಎತ್ತಿಕೊಂಡು ಹೋಗಿ ಪ್ರತಿಭಟಿಸಿದರು. ನೂರಾರು ಜನ ಭಾಗವಹಿಸಿದ್ದರಿಂದ ಟ್ರಾಫಿಕ್ ಜಾಮ್‌ನಲ್ಲಿ ಅಂಬುಲೆನ್ಸ್‌ ಸಿಲುಕಿತ್ತು.
ಈ ಸಂದರ್ಭದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಕಚ್ಚಾ ತೈಲ ಬೆಲೆ ಬ್ಯಾರೆಲ್ ಗೆ 130 ಡಾಲರ್ ಇತ್ತು. ಆಗಲೇ ಪೆಟ್ರೋಲ್, ಡೀಸೆಲ್, ಗ್ಯಾಸ್ ಗೆ ಕಾಂಗ್ರೆಸ್‌ ಸರ್ಕಾರ 2.41 ಲಕ್ಷ ಕೋಟಿ ರೂ ಸಬ್ಸಿಡಿ ನೀಡುತ್ತಿತ್ತು. ಈಗ ಕಚ್ಚಾ ತೈಲದ ಬ್ಯಾರೆಲ್ ಗೆ ಬೆಲೆ 40 ಡಾಲರ್ ನಷ್ಟಿದೆ. ಹೀಗಾಗಿ ಸದ್ಯ ತೈಲ ಬೆಲೆ ರೂ. 25 ಲೀಟರ್ ಗೆ ಮಾರಬೇಕು. ಕೇಂದ್ರ ಸರ್ಕಾರ ಒಂದು ರೂ. ಸಬ್ಸಿಡಿ ನೀಡುತ್ತಿಲ್ಲ. ಅಬಕಾರಿ ಸುಂಕ ಏರಿಸಿದ ಪರಿಣಾಮ ಅಗತ್ಯ ವಸ್ತುಗಳ ಬೆಲೆ ಹೆಚ್ಚಾಗಿದೆ ಎಂದು ಟೀಕಿಸಿದ್ದಾರೆ.

Exit mobile version