ಬೆಂಗಳೂರು: ಮುಂಗಾರು ಆರಂಭವಾಗಿರುವ ಹಿನ್ನೆಲೆಯಲ್ಲಿ 9 ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲೆಗಳ ವಿವಿಧ ಅಧಿಕಾರಿಗಳು, ಎಸ್ ಪಿಗಳ ಜೊತೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ ಮೂಲಕ ಸಭೆ ನಡೆಸಿದರು.
ಬೆಂಗಳೂರು ನಗರ, ಬೆಂಗಳೂರು ಗ್ರಾ, ಕಲಬುರ್ಗಿ, ಮೈಸೂರು ಸೇರಿದಂತೆ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಕೋವಿಡ್19, ಮಳೆ ಪರಿಸ್ಥಿತಿ ಹಾಗೂ ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಇಂದು ವೀಡಿಯೋ ಸಂವಾದವನ್ನು ನಡೆಸಲಾಯಿತು. ಹಿರಿಯ ಸಚಿವರುಗಳು, ಅಧಿಕಾರಿಗಳು ಉಪಸ್ಥಿತರಿದ್ದರು.
ಬಿ.ಎಸ್.ಯಡಿಯೂರಪ್ಪ ನಡೆಸಿದ ವಿಡಿಯೋ ಕಾನ್ಫರೆನ್ಸನ ಮುಖ್ಯಾಂಶಗಳು
1. ಕೋವಿಡ್ ನಿಯಂತ್ರಣ, ಕೃಷಿ ಚಟುವಟಿಕೆ, ಪ್ರವಾಹ ಪರಿಸ್ಥಿತಿಯ ಕುರಿತು ಮಾಹಿತಿ ಸಂಗ್ರಹ.
2. ರ್ಯಾಪಿಡ್ ಆಂಟಿಜೆನ್ ಟೆಸ್ಟ ನಡೆಸಲು ಆದ್ಯತೆ ನೀಡಿ. 1 ಲಕ್ಷ ಟೆಸ್ಟ್ ಕಿಟ್ ಖರೀದಿಸಲಾಗಿದೆ. ಈಗಾಗಲೇ ಜಿಲ್ಲೆಗಳಿಗೆ ವಿತರಿಸಲಾಗಿದ್ದು, ತುರ್ತು ಪ್ರಕರಣಗಳಲ್ಲಿ ವಿವೇಚನೆಯಿಂದ ಈ ಪರೀಕ್ಷೆ ನಡೆಸಲು ಸೂಚಿಸಲಾಗಿದೆ.
3. ಬೆಂಗಳೂರು ನಗರ ಹಾಗೂ ದಕ್ಷಿಣ ಕನ್ನಡ, ಧಾರವಾಡ, ಬಳ್ಳಾರಿ, ಉಡುಪಿ , ಕಲಬುರಗಿ ಹೆಚ್ಚು ಪ್ರಕರಣ ದಾಖಲಾಗಿದೆ. ಬೀದರ್, ಧಾರವಾಡ, ಗದಗ, ಮೈಸೂರು ಜಿಲ್ಲೆಗಳಲ್ಲಿ ಸಾವಿನ ಪ್ರಮಾಣ ಹೆಚ್ಚುತ್ತಿದ್ದು, ಇದನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳುವಂತೆ ಸೂಚನೆ. ಬೀದರ್ ಜಿಲ್ಲೆ ಸಾವಿನ ಪ್ರಮಾಣ ದೇಶದ 5 ಜಿಲ್ಲೆಗಳಲ್ಲಿ ಒಂದಾಗಿದ್ದು, ಮರಣ ಪ್ರಮಾಣ ನಿಯಂತ್ರಿಸುವಂತೆ ಸೂಚನೆ. ಈ ವರೆಗೆ ಸಂಭವಿಸಿದ ಮರಣಗಳ ಕುರಿತು ತಜ್ಞರ ವಿಶ್ಲೇಷಣಾ ವರದಿಯನ್ನು ಕೂಡಲೇ ಕಳುಹಿಸುವಂತೆ ಸೂಚನೆ.
4. ಕಂಟೇನ್ ಮೆಂಟ್ ಝೋನ್ ಗಳಲ್ಲಿ ಕಟ್ಟುನಿಟ್ಟಾಗಿ ಕ್ರಮ ವಹಿಸಬೇಕಾಗಿದೆ. ಅಲ್ಲದೆ, ಕ್ಷೇತ್ರ ಮಟ್ಟದ ಆರೋಗ್ಯ ಸಿಬ್ಬಂದಿ ಕೊರತೆ ಇರುವಲ್ಲಿ ಗುತ್ತಿಗೆ ಆಧಾರದಲ್ಲಿ 6 ತಿಂಗಳ ಅವಧಿಗೆ ನೇಮಕ ಮಾಡುವಂತೆ ಸೂಚಿಸಲಾಯಿತು.
5. ಹೊರಗಿನಿಂದ ವಲಸೆ ಬಂದವರ ಕ್ವಾರಂಟೈನ್ ಮತ್ತು ಹೆಚ್ಚಿನ ನಿಗಾ ವಹಿಸಲು ಸೂಚನೆ.
6. ನಾನ್ ಕೋವಿಡ್ ರೋಗಿಗಳ ಚಿಕಿತ್ಸೆಗೆ ಯಾವುದೇ ಅಡ್ಡಿಯಾಗದಂತೆ ಎಚ್ಚರ ವಹಿಸುವಂತೆ ಸೂಚನೆ.
7. ಯಾವುದೆ ಕಾರಣಕ್ಕೆ ಸಾರ್ವಜನಿಕ ಉತ್ಸವಗಳ ಆಚರಣೆ ಮಾಡುವಂತಿಲ್ಲ ಎಂದು ಎಚ್ಚರಿಕೆ.
8. ಬೆಂಗಳೂರಿನಲ್ಲಿ ಕೋವಿಡ್ ಮತ್ತು ನಾನ್ ಕೋವಿಡ್ ಚಿಕಿತ್ಸೆ ನೀಡಲು ಸಹಕರಿಸದ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ.
9. ಬೂತ್ ಮಟ್ಟದಲ್ಲಿ ಕ್ವಾರಂಟೈನ್, ಸಂಪರ್ಕಿತರ ಪತ್ತೆ ಹಚ್ಚುವುದು, ಮನೆ ಮನೆ ಸಮೀಕ್ಷೆ ನಡೆಸುವ ಪ್ರಕ್ರಿಯೆಯನ್ನು ಪರಿಶೀಲನೆ ನಡೆಸಲು ಬೂತ್ ಮಟ್ಟದ ಸಮಿತಿಗಳನ್ನು ರಚಿಸಿ, ಜನಪ್ರತಿನಿಧಿಗಳು ಹಾಗೂ ಸ್ವಯಂ ಸೇವಕರ ಸಹಕಾರವನ್ನು ಪಡೆಯುವಂತೆ ಸೂಚನೆ.
10. 60 ವರ್ಷ ಮೇಲ್ಪಟ್ಟವರು ಹಾಗೂ ಇತರ ತೀವ್ರ ಸ್ವರೂಪದ ಕಾಯಿಲೆಯಿಂದ ಬಳಲುತ್ತಿರುವವರನ್ನು ಪ್ರತ್ಯೇಕವಾಗಿರಿಸಬೇಕು ಮತ್ತು ಐಎಲ್ಐ ಮತ್ತು ಉಸಿರಾಟದ ತೊಂದರೆ ಇರುವವರನ್ನು ಗುರುತಿಸಿ, ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೊಳಪಡಿಸಬೇಕು.
11. ಸೀಲ್ ಡೌನ್ ಪ್ರಕ್ರಿಯೆಯನ್ನು ಪರಿಣಾಮಕಾರಿಯಾಗಿ ಮಾಡಬೇಕು. ಈ ಪ್ರದೇಶಗಳಲ್ಲಿ ಹೆಚ್ಚು ಪರೀಕ್ಷೆ ನಡೆಸಬೇಕು.
12. ಜನ ಧಾರ್ಮಿಕ ಸ್ಥಳಗಳಲ್ಲಿ, ಮಾರುಕಟ್ಟೆ ಮೊದಲಾದ ಸ್ಥಳಗಳಲ್ಲಿ ಜನ ಗುಂಪುಗೂಡದಂತೆ ಎಚ್ಚರ ವಹಿಸಬೇಕು.
13. ಕೋವಿಡ್ ಆಸ್ಪತ್ರೆಯಲ್ಲಿ ಸ್ವಚ್ಛತೆ ನಿರ್ವಹಣೆಯಲ್ಲಿ ತೊಡಗಿರುವ ಡಿ ಗ್ರೂಪ್ ನೌಕರರ ಪ್ರೋತ್ಸಾಹಧನ ಹೆಚ್ಚಳಕ್ಕೆ ಕ್ರಮ ವಹಿಸಲಾಗುವುದು.
14. ಅಂಬ್ಯುಲೆನ್ಸ ಮತ್ತು ಚಿಕಿತ್ಸೆಗೆ ಹಾಸಿಗೆಗಳ ಕೊರತೆಯಾಗದಂತೆ ಎಚ್ಚರ ವಹಿಸುವಂತೆ ಸೂಚನೆ.
15. ಡಿಜಿಟಲ್ ಎಕ್ಸ ರೇ ಯಂತ್ರಗಳ ಮೂಲಕ ಶ್ವಾಸಕೋಶದ ಸೋಂಕನ್ನು ತ್ವರಿತವಾಗಿ ಪತ್ತೆ ಹಚ್ಚಲು ಸಾಧ್ಯವಿದ್ದು, ಈ ಉಪಕರಣಗಳ ಬಳಕೆಗೆ ಆದ್ಯತೆ ನೀಡುವಂತೆ ಸೂಚನೆ.
16. ಕೋವಿಡ್ ಮಾರಣಾಂತಿಕ ಕಾಯಿಲೆ ಅಲ್ಲ, ಜನರು ಭಯಭೀತರಾಗುವ ಅಗತ್ಯವಿಲ್ಲ ಎಂದು ಜನರಿಗೆ ತಿಳುವಳಿಕೆ ನೀಡುವ ಅಗತ್ಯವಿದೆ.
ಮುಂಗಾರು ಹಿನ್ನೆಲೆ: ಮಳೆ ಬೆಳೆ ಕುರಿತ ಚರ್ಚೆಗಳು
17. ರಾಜ್ಯದಲ್ಲಿ ಉತ್ತಮ ಮಳೆಯಾಗಿದೆ. ಹೆಚ್ಚು ಮಳೆಯಾಗುತ್ತಿರುವ ಪ್ರದೇಶದಲ್ಲಿ ಜನರ ಸ್ಥಳಾಂತರಕ್ಕೆ ಮೊದಲೇ ಸ್ಥಳ ಗುರುತಿಸುವಂತೆ ಸೂಚಿಸಲಾಯಿತು.
18. ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲಾಧಿಕಾರಿಗಳೊಂದಿಗೆ ಸತತ ಸಂಪರ್ಕದಲ್ಲಿದ್ದು, ಕೃಷ್ಣಾ ನದಿಗೆ ಮಹಾರಾಷ್ಟ್ರದಿಂದ ಹರಿದುಬರುವ ನೀರಿನ ಪ್ರಮಾಣದ ಕುರಿತು ಜಾಗೃತರಾಗಿರುವಂತೆ ತಿಳಿಸಿದರು. ಅಲ್ಲದೆ, ರಾಜಾಪೂರ ಬ್ಯಾರೇಜಿನಲ್ಲಿ ರಾಜ್ಯದ ಎಂಜಿನಿಯರ್ ಒಬ್ಬರನ್ನು ನಿಯೋಜಿಸುವಂತೆ ಸೂಚನೆ.
19. ಅಕ್ಟೋಬರ್ ವರೆಗೆ ಉತ್ತಮ ಮಳೆ ಆಗುವ ನಿರೀಕ್ಷೆ ಇದೆ. ಪ್ರವಾಹ ಕುರಿತು ಎಚ್ಚರ ವಹಿಸಿ. ಮಣ್ಣಿನ ತೇವಾಂಶ ಹೆಚ್ಚಾಗುವ ಸಾಧ್ಯತೆ ಇದೆ. ಇದರಿಂದ ಬೆಳೆಹಾನಿಯಾಗದಂತೆ ಎಚ್ಚರ ವಹಿಸಲು ಸೂಚನೆ.
20. ಉತ್ತಮ ಮಳೆಯಾಗಿ, ಬಂಪರ್ ಬೆಳೆ ಬರುವ ಸಾಧ್ಯತೆ ಇದ್ದು, ಬೇಡಿಕೆ ಕಡಿಮೆ ಇರುವ ಕಾರಣ ಗೋಡೌನ್ ಗಳನ್ನು ಗುರುತಿಸಿ, ಕೃಷಿ ಉತ್ಪನ್ನ ದಾಸ್ತಾನಿಗೆ ಸೂಕ್ತ ವ್ಯವಸ್ಥೆ ಮಾಡುವಂತೆ ಸೂಚನೆ.
ಇಂದಿನ ವಿಡಿಯೋ ಕಾನ್ಫರೆನ್ಸ್ ವೇಳೆ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್. ಅಶೋಕ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಮುಖ್ಯಮಂತ್ರಿ ಅಪರ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಹಾಗೂ ಕಾರ್ಯದರ್ಶಿ ಡಾ. ಎಸ್. ಸೆಲ್ವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.