ಬೆಂಗಳೂರು : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತ ವಿರೋಧಿ ನೀತಿ ತಾಳುತ್ತಿವೆ ಎಂದು ಆರೋಪಿಸಿ ನೀಡಲಾಗಿದ್ದ ಬಂದ್ ಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬೆಂಬಲ ವ್ಯಕ್ತವಾಗುತ್ತಿದೆ. ಈಗಾಗಲೇ ಪ್ರತಿಭಟನೆ ಕೂಡ ಶುರುವಾಗಿದೆ. ನಗರದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ರೈಲ್ವೆ ನಿಲ್ದಾಣಕ್ಕೆ ಮುತ್ತಿಗೆಗೆ ಪ್ರತಿಭಟನಾಕಾರರು ಯತ್ನಿಸಿದ್ದಾರೆ.
ಈ ಸಂದರ್ಭದಲ್ಲಿ ಸುಮಾರು 50ಕ್ಕೂ ಹೆಚ್ಚು ಕರವೇ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಕರವೇ ಮಹಿಳಾ ಕಾರ್ಯಕರ್ತೆಯರು ವಿಮಾನ ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದ್ದರು. ಪೊಲೀಸರು 30ಕ್ಕೂ ಹೆಚ್ಚು ಮಹಿಳಾ ಕಾರ್ಯಕರ್ತೆಯರನ್ನು ಬಂಧಿಸಿದ್ದಾರೆ. ಅಲ್ಲದೇ, ಹೋರಾಟಗಾರರು ಮೆಜೆಸ್ಟಿಕ್ ನಲ್ಲಿ ಪ್ರತಿಭಟನೆ ನಡೆಸಿ, ರೈಲ್ವೆ ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದರು. ಅವರನ್ನೂ ಕೂಡ ಪೊಲೀಸರು ಬಂಧಿಸಿದ್ದಾರೆ. ಹೋರಾಟಗಾರರಾದ ಕೋಡಿಹಳ್ಳಿ ಚಂದ್ರಶೇಖರ್, ಟಿ.ಎ. ನಾರಾಯಣಗೌಡ ಸೇರಿದಂತೆ ಹಲವರನ್ನು ಈ ಸಂದರ್ಭದಲ್ಲಿ ಬಂಧಿಸಲಾಗಿದೆ.
ಆದರೆ, ಬಂಧಿತ ಪ್ರತಿಭಟನಾಕಾರರು ಬಸ್ ನಿಂದ ಕೆಳಗೆ ಇಳಿದ ಮತ್ತೆ ಪ್ರತಿಭಟನೆ ನಡೆಸಿದ ಘಟನೆ ಆನಂದ್ ರಾವ್ ಫ್ಲೈ ಓವರ್ ಬಳಿ ನಡೆದಿದೆ. ಕಾರ್ಯಕರ್ತರನ್ನು ಮತ್ತೆ ಬಸ್ ನಲ್ಲಿ ಹಾಕಿ, ಪೊಲೀಸರು ಕಳುಹಿಸಿದ್ದಾರೆ. ಬೆಂಗಳೂರಿನ ಹಲವೆಡೆ ಈಗಾಗಲೇ ಹೋರಾಟ ಪ್ರಾರಂಭವಾಗಿದೆ.