ತುಮಕೂರು : ಶಿರಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ. ಜಯಚಂದ್ರ ಅವರು ಇಂದು ನಾಮಪತ್ರ ಸಲ್ಲಿಸಿದ್ದಾರೆ.
ಟಿ.ಟಿ. ಜಯಚಂದ್ರ ಅವರು ಈ ಹಿಂದೆ ರೂ. 2500 ಕೋಟಿ ಅನುದಾನ ತಂದು ಸಾಕಷ್ಟು ಅಭಿವೃಧಿ ಕಾರ್ಯಗಳನ್ನು ಮಾಡಿದ್ದಾರೆ. ಇದು ಜನರ ಮನದಲ್ಲಿ ಹಾಗೆಯೇ ಉಳಿದಿದೆ. ಹೀಗಾಗಿ ಈ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಈ ಹಿಂದಿನ ಚುನಾವಣೆಯಲ್ಲಿ ಇಲ್ಲಿಯ ಜನ, ಇದು ಸತ್ಯನಾರಾಯಣ್ ಅವರ ಕೊನೆಯ ಚುನಾವಣೆ ಎಂಬ ಕಾರಣಕ್ಕೆ ಗೆಲ್ಲಿಸಿದ್ದಾರೆ. ನಮ್ಮ ಅಭ್ಯರ್ಥಿ ಟಿ.ಬಿ ಜಯಚಂದ್ರ ವಿದ್ಯಾವಂತ, ಬುದ್ಧಿವಂತರಿದ್ದಾರೆ. ನಾವು ಮುಂದೆ ರಾಜ್ಯಕ್ಕೆ ಅಭಿವೃದ್ದಿ ಸರ್ಕಾರ ಕೊಡುತ್ತೇವೆ ಎಂದು ಹೇಳಿದ ಅವರು, ಇಲ್ಲಿ ಕಾಂಗ್ರೆಸ್ ಗೆಲ್ಲಿಸುವುದರ ಮೂಲಕ ರಾಜ್ಯ ಸರ್ಕಾರದ ಅಧಿಕಾರ ಸರಿಯಿಲ್ಲ ಎಂಬ ಸಂದೇಶ ನೀಡಬೇಕು ಎಂದು ಮತದಾರರಲ್ಲಿ ಮನವಿ ಮಾಡಿದರು.
ಮಾಜಿ ಸಿಎಂ ಸಿದ್ದರಾಮಯ್ಯ ಮಾತನಾಡಿ, ಸದ್ಯ ರಾಜ್ಯದಲ್ಲಿ ನಿಷ್ಕ್ರೀಯ ಸರ್ಕಾರವಿದೆ. ಈ ಸರ್ಕಾರಕ್ಕೆ ಎಚ್ಚರಿಕೆ ಗಂಟೆ ಬಾರಿಸುವ ಸಂದರ್ಭ ಈಗ ಒದಗಿ ಬಂದಿದೆ. ರಾಜ್ಯ ಸರ್ಕಾರವು ಆರ್ಥಿಕತೆಯನ್ನು ದಿವಾಳಿತನಕ್ಕೆ ತಂದು ನಿಲ್ಲಿಸಿದೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಜಯಚಂದ್ರ ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಹೀಗಾಗಿ ಜನರು ಈ ಬಾರಿ ಅವರಿಗೆ ಆಶೀರ್ವಾದ ಮಾಡಬೇಕು ಎಂದು ಮನವಿ ಮಾಡಿದರು.
