ವಿಜಯಪುರ : ರಾಜ್ಯದಲ್ಲಿ ಸುರಿಯುತ್ತಿರುವ ವಿಪರೀತ ಮಳೆಯಿಂದಾಗಿ ಜನರ ಬದುಕು ಮೂರಾಬಟ್ಟೆಯಾಗಿದೆ. ಜನರು ಅಕ್ಷರಶಃ ನಲುಗಿ ಹೋಗುತ್ತಿದ್ದಾರೆ. ಉತ್ತರ ಕರ್ನಾಟಕ ಜನರ ಬದುಕಂತೂ ಹೇಳತೀರದಾಗಿದೆ.
ಜಿಲ್ಲೆಯ ತಾಳಿಕೋಟೆ ಪಟ್ಟಣದ ಬಳಿಯ ಡೋಣಿ ನದಿಯ ನಡುಗಡ್ಡೆಯಲ್ಲಿ 7 ಜನರು ಸಿಲುಕಿಕೊಂಡಿದ್ದು, ಸಹಾಯಕ್ಕಾಗಿ ಅಂಗಲಾಚುತ್ತಿದ್ದಾರೆ. ಹೀಗಾಗಿ ರಕ್ಷಣಾ ಕಾರ್ಯಕ್ಕೆ ಮುಂದಾಗಲಾಗಿದೆ. ಇದ್ದಿಲು ತಯಾರಿಸಲು ಬಂದಿದ್ದ, ಮಹಾರಾಷ್ಟ್ರದ ಈ 7 ಜನ ಡೋಣಿ ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದಾರೆ. ಈ ಪೈಕಿ ಐವರು ಮಕ್ಕಳಿದ್ದಾರೆ. ಹೀಗಾಗಿ ಜಿಲ್ಲೆಯ ಜನರ ಕರಳು ಚುರ್ ಎನ್ನುತ್ತಿದೆ.
ನದಿ ಪಾತ್ರದಲ್ಲಿ ವಿಪರೀತ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನೀರು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಹೀಗಾಗಿ ಇವರು ಹೊರ ಬರಲು ಸಾಧ್ಯವಾಗದೆ ಸ್ಥಳೀಯ ಅಧಿಕಾರಿಗಳಿಗೆ ಕರೆ ಮಾಡಿ ಸಹಾಯಕ್ಕೆ ಮನವಿ ಮಾಡಿದ್ದಾರೆ. ಏಳು ಜನರನ್ನು ಕರೆ ತರಲು ಬೋಟ್ ಗಳ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಗುರುವಾರ ರಾತ್ರಿಯೇ ಸ್ಥಳಕ್ಕೆ ಎಸಿ ಬಲರಾಮ ಲಮಾಣಿ ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅಲ್ಲದೇ, ಇಂದು ಅವರನ್ನು ರಕ್ಷಿಸುವ ಸಾಧ್ಯತೆ ಇದೆ. ನಿರಂತರ ಮಳೆಯಿಂದಾಗಿ ಹಳ್ಳ – ಕೊಳ್ಳಗಳು ತುಂಬಿ ಹರಿಯುತ್ತಿವೆ. ಇದರಿಂದಾಗಿ ಹಲವು ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ವಿಪರೀತ ಮಳೆಯಿಂದಾಗಿ ಜನರು ದಿಕ್ಕು ಕಾಣದವರಂತಾಗಿದ್ದಾರೆ.