ಗದಗ : ಸಂಗೊಳ್ಳಿ ರಾಯಣ್ಣ ಹಾಗೂ ಕಿತ್ತೂರು ರಾಣಿ ಚೆನ್ನಮ್ಮ ಅವರ ಮೂರ್ತಿ ಪ್ರತಿಷ್ಠಾಪನೆ ವಿಷಯವಾಗಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿರುವ ಘಟನೆ ತಾಲೂಕಿನ ಬಳಗಾನೂರಿನಲ್ಲಿ ನಡೆದಿದೆ.
ಬಳಗಾನೂರ ಗ್ರಾಮದ ಬಸ್ ನಿಲ್ದಾಣದ ಹತ್ತಿರುವ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ಮಾಡಬೇಕು ಎಂದು ಕುರುಬ ಸಮುದಾಯದ ಜನರು ನಿರ್ಧರಿಸಿದ್ದರು. ಆದರೆ, ಸ್ಥಳದಲ್ಲಿ ಜಾಗದಲ್ಲಿ ಕಿತ್ತೂರು ರಾಣಿ ಚನ್ನಮ್ಮನ ಮೂರ್ತಿ ಪ್ರತಿಷ್ಠಾಪನೆ ಮಾಡಬೇಕು ಎಂದು ಪಂಚಮ ಸಾಲಿ ಸಮುದಾಯ ಜನರು ನಿರ್ಧರಿಸಿದ್ದರು.
ಸದ್ಯ ಈ ವಿಷಯವಾಗಿಯೇ ಎರಡು ಸಮುದಾಯದ ನಡುವೆ ಜಗಳ ಪ್ರಾರಂಭವಾಗಿದೆ. ರಾತ್ರೋರಾತ್ರಿ ನಿರ್ಮಾಣವಾಗಿದ್ದ ಸಂಗೊಳ್ಳಿ ರಾಯಣ್ಣ ಮೂರ್ತಿಯನ್ನು ತೆರವುಗೊಳಿಸಿದ್ದಾರೆ. ಇದರಿಂದ ರಾಯಣ್ಣ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಪೊಲೀಸರು ಗುಂಪು ಚದುರಿಸಲು ಮುಂದಾಗಿದ್ದಾರೆ. ಪ್ರತಿಭಟನಾಕಾರರು ಹಾಗೂ ಪೊಲೀಸರ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಪೊಲೀಸರು ಗುಂಪು ಚದುರಿಸಲು ಲಘು ಲಾಠಿ ಪ್ರಹಾರ ಮಾಡಿದ್ದಾರೆ. ಈ ವೇಳೆ ಕೆಲ ಕಿಡಿಗೇಡಿಗಳು ಗದಗ ಎಸಿ ರಾಯಪ್ಪ ಹಾಗೂ ಡಿವೈಎಸ್ಪಿು ಪ್ರಹ್ಲಾದ್ ಅವರ ಎರಡು ವಾಹನಕ್ಕೆ ಕಲ್ಲು ಹೊಡೆದು ಜಖಂ ಗೊಳಿಸಿದ್ದಾರೆ.
ಈ ಕುರಿತು ಎರಡು ಸಮುದಾಯದ ಹಲವರನ್ನು ಬಂಧಿಸಲಾಗಿದೆ. ಸದ್ಯ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಎಲ್ಲ ಘಟನೆಗೆ ಸಚಿವ ಸಿ.ಸಿ. ಪಾಟೀಲ್ ಅವರೇ ಕಾರಣ ಎಂದು ಕುರುಬ ಸಮುದಾಯದವರು ವಾದಿಸುತ್ತಿದ್ದಾರೆ. ಹೀಗಾಗಿ ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.