ಭೋಪಾಲ್: ಮಧ್ಯಪ್ರದೇಶದ ಸಚಿವೆ ಇಮರ್ತಿ ದೇವಿ ಅವರನ್ನು ಮಾಜಿ ಸಿಎಂ ಅಧ್ಯಕ್ಷ ಕಮಲ್ ನಾಥ್ ಅವರು ಐಟಮ್ ಎಂದು ಕರೆದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಇಮರ್ತಿ ದೇವಿ ಅವರು, ಶಿವರಾಜ್ ಸಿಂಗ್ ಚವ್ಹಾಣ್ ಅವರ ನೇತೃತ್ವದ ಸರ್ಕಾರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರು, ಗ್ವಾಲಿಯರ್ ನ ದಬ್ರಾ ಕ್ಷೇತ್ರದಿಂದ ಮೂರು ಬಾರಿ ಶಾಸಕಿಯಾಗಿ ಆಯ್ಕೆಯಾಗಿದ್ದರು. ಈಗ ಅದೇ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದಾರೆ.
ಕಮಲ್ ನಾಥ್ ನೇತೃತ್ವದ ಸರ್ಕಾರವಿದ್ದ ಸಂದರ್ಭದಲ್ಲಿ ಕೂಡ ಇಮರ್ತಿ ದೇವಿ ಅವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆಯ ಜವಾಬ್ದಾರಿ ವಹಿಸಿಕೊಂಡಿದ್ದರು. ಆದರೆ, ಸದ್ಯ ಕಮಲ್ ನಾಥ್ ಅವರ ಸರ್ಕಾರ ಬಿದ್ದು ಹೋಗಿದೆ.
ಉಪಚುನಾವಣೆಯ ಹಿನ್ನೆಲೆಯಲ್ಲಿ ದಬ್ರಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಸುರೇಶ್ ರಾಜೆ ಅವರ ಪರ ಮತ ಯಾಚನೆ ಮಾಡುತ್ತಿದ್ದ ಸಂದರ್ಭದಲ್ಲಿ ಕಮಲ್ ನಾಥ್, ನಮ್ಮ ಅಭ್ಯರ್ಥಿ ಸುರೇಶ್ ರಾಜೆ ಸರಳ ಮನುಷ್ಯ, ಆಕೆಯಂಥಹ ವ್ಯಕ್ತಿತ್ವ ಇಲ್ಲ. ಆಕೆಯ ಹೆಸರೇನು, ನಿಮಗೆಲ್ಲಾ ಆಕೆಯ ಬಗ್ಗೆ ನನಗಿಂತ ಚೆನ್ನಾಗಿ ಗೊತ್ತಿದೆ. ನೀವೆಲ್ಲಾ ನನಗೆ ಮೊದಲೇ ಎಚ್ಚರಿಕೆ ನೀಡಬೇಕಾಗಿತ್ತು, ಎಂತಹ ಐಟಮ್ ಎಂದು ಹೇಳಿದ್ದಾರೆ.
ಇದಕ್ಕೆ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಿರಿಯ ನಾಯಕರೊಬ್ಬರು ಹಾಗೂ ಸಿಎ ಸ್ಥಾನದಲ್ಲಿ ಇದ್ದು ಬಂದವರು ಈ ರೀತಿಯ ಹೇಳಿಕೆಗಳನ್ನು ಕೊಡುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಜೆಪಿಯ ನಿಯೋಗವು ಭೋಪಾಲ್ ನಲ್ಲಿ ಚುನಾವಣಾ ಆಯೋಗದ ಅಧಿಕಾರಿಗಳನ್ನು ಭೇಟಿ ಮಾಡಿ ಮಹಿಳೆ ಮತ್ತು ದಲಿತರ ವಿರುದ್ಧ ಕಮಲ್ ನಾಥ್ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ದೂರು ನೀಡಿದ್ದಾರೆ.
