ಬೆಂಗಳೂರು : ಇಂದು ಸಂಜೆ ದೇಶ ಉದ್ಧೇಶಿಸಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಅವರು ವಾಗ್ದಾಳಿ ನಡೆಸಿದ್ದಾರೆ.
ಸರಣಿ ಟ್ವೀಟ್ ಗಳನ್ನು ಮಾಡುವುದರ ಮೂಲಕ ಸಿದ್ದರಾಮಯ್ಯ ಅವರು ಮೋದಿ ಅವರ ನಡೆ ವಿರೋಧಿಸಿದ್ದಾರೆ. ಜನರಿಗೆ ಕರ್ತವ್ಯ ಪಾಲನೆಯ ಪಾಠ ಮಾಡುವ ಮೊದಲು ಪ್ರಧಾನಿ ಆತ್ಮಾವಲೋಕನ ಮಾಡಿಕೊಳ್ಳಬೇಕಿತ್ತು. ಕೊರೊನಾ ಸೋಂಕಿನ ನಿಯಂತ್ರಣ ಮತ್ತು ಅದರಿಂದಾದ ಹಾನಿಯ ಬಗ್ಗೆ ಪರಿಹಾರ ನೀಡಲು ಕೇಂದ್ರ ಸರ್ಕಾರ ಮುಂದಾಗಬೇಕಿತ್ತು ಎಂದು ಆರೋಪಿಸಿದ್ದಾರೆ.
ದೇಶದ ಜನತೆಗೆ ಬುದ್ದಿವಾದ ಹೇಳುವ ಮೂಲಕ ಪ್ರಧಾನಿ ತಮ್ಮ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡಿದ್ದಾರೆ. ಕೊರೊನಾ ಸೋಂಕು ಉಲ್ಬಣಕ್ಕೆ ಜನರ ನಿರ್ಲಕ್ಷಕ್ಕಿಂತಲೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಹೊಣೆಗೇಡಿತನ ಕಾರಣ ಎನ್ನುವುದನ್ನು ಪ್ರಧಾನಿ ಒಪ್ಪಿಕೊಳ್ಳುವ ಮೂಲಕ ಜನರಲ್ಲಿ ಕ್ಷಮೆಯಾಚಿಸಬೇಕು ಎಂದು ಹೇಳಿದ್ದಾರೆ.
ಕೊರೊನಾ ಸೋಂಕು ಪ್ರಾರಂಭಗೊಂಡಾಗ ಪ್ರಧಾನಿಯವರು ‘ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯನ್ನು ಜೂನ್ ನಲ್ಲಿ ಪ್ರಕಟಿಸಿದ್ದರು. ಅದು ಜನರಿಗೆ ತಲುಪಿದೆಯೇ ಎಂದು ಪ್ರಶ್ನಿಸಿದ ಅವರು, ಅನ್ನಭಾಗ್ಯದಲ್ಲಿ ನೀಡಲಾಗುತ್ತಿದ್ದ ಅಕ್ಕಿಯನ್ನು 7 ರಿಂದ 5 ಕಿಲೋಗೆ ಇಳಿಸಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.
ಪ್ರಧಾನಿ ಅವರು ದೇಶಕ್ಕೆ ಕೊರೊನಾ ಅಂಟಿಕೊಂಡ ನಂತರ, ಜಾಗಟೆ ಬಾರಿಸಿ, ದೀಪ ಹಚ್ಚಲು ಹೇಳಿದ್ದರು. ಮೂಢತನದ ಭಾಷಣಗಳೇ ಕೊರೊನಾ ಸೋಂಕಿನ ಬಗ್ಗೆ ಜನರ ನಿರ್ಲಕ್ಷಕ್ಕೆ ಮುಖ್ಯ ಕಾರಣವಾಯಿತು ಎಂದು ಆರೋಪಿಸಿದ್ದಾರೆ.