ಲಕ್ಷ್ಮೇಶ್ವರ: ಸೋಕ್ ಪಿಟ್ ಮತ್ತು ಪೌಷ್ಟಿಕ ತೋಟ ನಿರ್ಮಾಣ ಗುರಿಯನ್ನು ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ನರೇಗಾ ಸಿಬ್ಬಂದಿ ಶೀಘ್ರದಲ್ಲೇ ತಲುಪಲು ಪ್ರಯತ್ನಿಸಬೇಕು ಎಂದು ಜಿಪಂ ಉಪ ಕಾರ್ಯದರ್ಶಿ ಬಿ.ಕಲ್ಲೇಶ ಅವರು ಹೇಳಿದರು.
ಲಕ್ಷ್ಮೇಶ್ವರ ಪಟ್ಟಣದ ತಾಲೂಕು ಪಂಚಾಯತ್ ಸಭಾಭವನದಲ್ಲಿ ಹಮ್ಮಿಕೊಳ್ಳಲಾದ ಲಕ್ಷ್ಮೇಶ್ವರ ತಾಲೂಕಿನ ಪ್ರಗತಿ ಪರಿಶೀಲನಾ ಸಭೆಯಲ್ಲಿ ತಾಲೂಕಿನ ಪಿಡಿಓ ಗಳಿಗೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ ಪಶ್ಚಿಮ ಪದವೀಧರರ ಚುನಾವಣೆ ಎದುರಾಗಿರೋ ಹಿನ್ನೆಲೆ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಸರ್ಕಾರದ ಕಾಮಗಾರಿಗಳನ್ನು ನಿಗದಿತ ದಿನಾಂಕದೊಳಗೆ ಪೂರ್ಣಗೊಳಿಸಿಲು ಶ್ರಮಿಸಬೇಕು ಎಂದರು.
ಪದವೀಧರ ಕ್ಷೇತ್ರದ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದೆ ಎಂಬ ಕಾರಣಕ್ಕೆ ಸರ್ಕಾರದ ಸಾರ್ವಜನಿಕ ಕಾರ್ಯಗಳಲ್ಲಿ ವಿಳಂಬವಾಗಬಾರದು ಎಂದರು.
ಸರ್ಕಾರದಿಂದ ಘೋಷಣೆಯಾಗಿ ಜಾರಿಯಲ್ಲಿರುವ ಗ್ರಾಮ ಪಂಚಾಯತ್ ಮಟ್ಟದ ಯೋಜನೆಗಳನ್ನು ಸಕಾಲದಲ್ಲಿ ಪೂರ್ಣಗೊಳಿಸಲು ಪಂಚಾಯತ್ ಪಿಡಿಓಗಳು ಶ್ರಮಿವಹಿಸಬೇಕು. ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಮಯಕ್ಕೆ ಸರಿಯಾಗಿ ತೆರಿಗೆ ಪರಿಷ್ಕರಣೆಗೊಳಿಸಿ ಹೆಸ್ಕಾಂಗೆ ಪಾವತಿಸಬೇಕಾದ ಬಾಕಿ ವಿದ್ಯುತ್ ಬಿಲ್ ಮೊತ್ತವನ್ನು ಪಾವತಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು. ತಾಲೂಕಿನ ಗ್ರಾಮ ಪಂಚಾಯತ್ ಸಿಬ್ಬಂದಿಗಳ ಸೇವಾ ಪುಸ್ತಕ ತೆರೆದು ಪ್ರಗತಿಯಲ್ಲಿಟ್ಟುಕೊಳ್ಳಬೇಕು ಎಂದು ಸಭೆಯಲ್ಲಿದ್ದ ಪಿಡಿಓ ಗಳಿಗೆ ಸೂಚಿಸಿದರು.
ತಾಲೂಕಿನಲ್ಲಿ ಕಳೆದ ೪೫ ದಿನಗಳಿಂದ ಬಚ್ಚಲುಗುಂಡಿ ಹಾಗೂ ಪೌಷ್ಟಿಕ ತೋಟ ಅಭಿಯಾನ ನಡೆಸಿದ್ರು ನಿರ್ಧಿಷ್ಟ ಗುರಿ ತಲುಪಲು ಸಾಧ್ಯವಾಗಿಲ್ಲ. ತಕ್ಷಣ ಆಯಾ ಗ್ರಾಮದ ವ್ಯಾಪ್ತಿಯ ಜನರಲ್ಲಿ ಬಚ್ಚಲುಗುಂಡಿ ಹಾಗೂ ಪೌಷ್ಟಿಕ ತೋಟ ನಿರ್ಮಾಣದ ಜಾಗೃತಿ ಮೂಡಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಅಂತ ಸಂಬಂಧಪಟ್ಟ ಅಧಿಕಾರಿಗಳಿಗೆ ಅವರು ಎಚ್ಚರಿಕೆ ನೀಡಿದರು. ಮುಂದಿನ ಸಭೆಯ ವೇಳೆಗೆ ಎಲ್ಲ ಅಭಿವೃದ್ಧಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಹೇಳಿದರು.
ಪ್ರಗತಿ ಪರಿಶೀಲನಾ ಸಭೆಯಲ್ಲಿ ಲಕ್ಷ್ಮೇಶ್ವರ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಆರ್.ವೈ. ಗುರಿಕಾರ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಅರಣ್ಯ ಇಲಾಖೆ, ಕೃಷಿ ಇಲಾಖೆ, ತೋಟಗಾರಿಕೆ ಸೇರಿದಂತೆ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
