ಗದಗ: ನಗರದಲ್ಲಿಂದು ಬೆಳ್ಳಂಬೆಳಿಗ್ಗೆ ಎಸಿಬಿ ಅಧಿಕಾರಿಗಳು ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕ ಎಸ್.ಎನ್.ರುದ್ರೇಶ ಅವರ ಮನೆ ಹಾಗೂ ಕಚೇರಿ ಮೇಲೆ ದಾಳಿ ಮಾಡಿದ್ದಾರೆ.
ಎಸಿಬಿ ಅಧಿಕಾರಿಗಳು ರುದ್ರೇಶ್ ಅವರಿಗೆ ಸಂಬಂಧಿಸಿದಂತೆ ಏಕಕಾಲಕ್ಕೆ 3 ಕಡೆ ದಾಳಿಮಾಡಿದ್ದಾರೆ ಎಂದು ತಿಳಿದು ಬಂದಿದೆ.
ನಗರದ ನೌಕರರ ಭವನ ಬಳಿ ಇರುವ ಮನೆ, ಜಿಲ್ಲಾಡಳಿತ ಭವನದ ಕಚೇರಿ ಹಾಗೂ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕಿನ ಚಿಕ್ಕಜಾಜೂರ ನಿವಾಸದ ಮೇಲೆ ದಾಳಿ ಮಾಡಿದ್ದಾರೆ ಎನ್ನಲಾಗಿದೆ.
ಅಧಿಕಾರಿ ಎಸ್.ಎನ್.ರುದ್ರೇಶ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪ ಹಿನ್ನಲೆಯಲ್ಲಿ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ದಾಳಿ ವೇಳೆ ಚಿನ್ನ ಹಾಗೂ ನಗದು ಪತ್ತೆಯಾಗಿದ್ದು, ಅಧಿಕಾರಿಗಳು ಇನ್ನು ಕಡತಗಳ ಪರಿಶೀಲನೆ ನಡೆಸಿದ್ದಾರೆ. ಬೆಳಗಾವಿ ಎಸಿಬಿ ಡಿವೈಎಸ್ಪಿ ಮಹಾಂತೇಶ, ಗದಗ ಸಿಪಿಐ ಧರಣಾಯಿಕ್, ಸಿಪಿಐ ಸುನೀಲ್ ಹಾಗೂ ಸಿಬ್ಬಂದಿಗಳ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.