ಬೆಂಗಳೂರು: ನಿನ್ನೆ ಸಂಜೆಯಿಂದ ರಾತ್ರಿ ಪೂರ್ತಿ ಸುರಿದ ಮಳೆಯಿಂದಾಗಿ ನಗರದ ಹೊಸಕೆರೆ ಹಳ್ಳಿ ಸಂಪೂರ್ಣವಾಗಿ ಮುಳುಗಡೆಗೊಂಡಿದೆ. ಹೀಗಾಗಿ ಜನ – ಜೀವನ ಸಂಪೂರ್ಣವಾಗಿ ಹದಗೆಟ್ಟಿದೆ.
ಹೊಸಕೆರೆಹಳ್ಳಿಯಲ್ಲಿ ವೃಷಭಾವತಿ ಕಾಲುವೆಗೆ ಸಂಪರ್ಕಿಸುವ ಬೃಹತ್ ರಾಜಕಾಲುವೆಯ ಕಾಮಗಾರಿಗಾಗಿ ನೀರಿನ ದಿಕ್ಕನ್ನು ಬದಲಾಯಿಸಲಾಗಿದೆ. ನೀರಿನ ದಿಕ್ಕನ್ನು ಬದಲಿಸಿದ ಪರಿಣಾಮ ಭಾರೀ ಪ್ರಮಾಣದ ನೀರು ಒಮ್ಮೆಲೆ ನುಗ್ಗಿ ಬಂದಿದೆ. ಪರಿಣಾಮ ರಾಜಕಾಲುವೆ ಸಮೀಪದ ಮನೆಗಳು, ಕಟ್ಟಡಗಳು ಜಲಾವೃತಗೊಂಡಿವೆ. ಈ ಭಾಗದಲ್ಲಿ ಅಂದಾಜು 350ಕ್ಕೂ ಹೆಚ್ಚಿನ ಮನೆಗಳಿಗೆ ನೀರು ನುಗ್ಗಿದ್ದು, ಜನರು ಪರದಾಡುತ್ತಿದ್ದಾರೆ.
ಹೊಸಕೆರೆಹಳ್ಳಿ ಪಿಇಎಸ್ ಕಾಲೇಜು ಹಿಂಭಾಗದ ರಾಜಕಾಲುವೆ ಪಕ್ಕದ ರಸ್ತೆಯಲ್ಲಿಯೇ ನದಿಯಂತೆ ರಭಸವಾಗಿ ನೀರು ಹರಿದ ಪರಿಣಾಮ ಮಾರುತಿ ಸ್ವಿಫ್ಟ್ ಕಾರೊಂದು ಕೊಚ್ಚಿಕೊಂಡು ಹೋಯಿತು. ದತ್ತಾತ್ರೇಯನಗರ ಒಂದರಲ್ಲಿಯೇ 300ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ.
ಇಲ್ಲಿನ ಬಡಾವಣೆಗಳ ಮನೆ, ಅಪಾರ್ಟ್’ಮೆಂಟ್ ಗಳಿಗೆ ನೀರು ನುಗ್ಗಿ ನಿವಾಸಿಗಳು ಪರದಾಡಿದರು. ಹೊಸಕೆರೆಹಳ್ಳಿಯಲ್ಲಿ ಜನರು ಕಟ್ಟಡಗಳ ಮೇಲೆ ಆಶ್ರಯ ಪಡೆದಿದ್ದರು. ನೆಲಮಹಡಿಯಲ್ಲಿ ಸಿಲುಕಿದ್ದವರನ್ನು ಅಗ್ನಿಶಾಮಕ ತಂಡ ಹಾಗೂ ಎಸ್’ಡಿಆರ್ಎಫ್ ಸಿಬ್ಬಂದಿ ಬೋಟ್ ಮೂಲಕ ರಕ್ಷಣೆ ಮಾಡಿದರು, ಹೊಸಕೆರೆಹಳ್ಳಿ ದತ್ತಾತ್ರೇಯ ದೇವಾಲಯವೂ ಮುಳುಗಿದೆ.
ಅ.21 ರಂದು ಸುರಿದ ಮಳೆಯಿಂದಾಗಿ ಹೊಸಕೆರೆಹಳ್ಳಿ ಗುರುದತ್ತ ಲೇಔಟ್ನಲ್ಲಿ ರಾಜಕಾಲುವೆ ಕುಸಿದು ಅವಾಂತರ ಸೃಷ್ಟಿಯಾಗಿತ್ತು.