ಸ್ಥಳೀಯ ಸಂಸ್ಥೆಯ ಚುನಾವಣೆಯಲ್ಲಿಯೂ ಶುರುವಾಯಿತು ಆಪರೇಷನ್ ಕಮಲ!

ಚಿಕ್ಕೋಡಿ : ಸ್ಥಳೀಯ ಸಂಸ್ಥೆ ಚುನಾವಣೆಯಿಂದಲೂ ಬಿಜೆಪಿಯಿಂದ ಆಪರೇಷನ್ ಕಮಲ ನಡೆಯುತ್ತಿದೆ ಎಂಬ ಆರೋಪ ಕೇಳಿ ಬರುತ್ತಿದೆ.

ಸ್ಥಳೀಯ ಸಂಸ್ಥೆಗಳಾದ ಹುಕ್ಕೇರಿ ಮತ್ತು ಸಂಕೇಶ್ವರ ಪುರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿಯೂ ಆಪರೇಷನ್ ಕಮಲ ನಡೆಸಲು ಸಿದ್ಧತೆ ನಡೆಯುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಶಾಸಕ ಉಮೇಶ್ ಕತ್ತಿ, ಸಹೋದರ ರಮೇಶ್ ಕತ್ತಿ ಹಾಗೂ ಸಂಸದ ಅಣ್ಣಾಸಾಹೇಬ ಜೊಲ್ಲೆ ನೇತೃತ್ವದಲ್ಲಿಯೇ ಈ ಕಾರ್ಯ ನಡೆಯುತ್ತಿದೆ ಎಂಬ ಮಾತು ಕೇಳಿ ಬರುತ್ತಿದೆ.

ಇಂದು ಹಾಗೂ ನಾಳೆ ಜರುಗಲಿರುವ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಹಾಗೂ ಸಂಕೇಶ್ವರ ಪುರಸಭೆಗಳನ್ನು ಸಂಖ್ಯಾಬಲ ಇಲ್ಲದಿದ್ದರೂ ಹಿಂಬದಿಯಿಂದ ವಶಕ್ಕೆ ಪಡೆಯುವ ಪ್ರಯತ್ನ ನಡೆಯಲಾಗುತ್ತಿದೆ ಎನ್ನಲಾಗಿದೆ.
ಹುಕ್ಕೇರಿ ಪುರಸಭೆಯ 23 ವಾರ್ಡ್ ಗಳ ಪೈಕಿ ಬಿಜೆಪಿ 8, ಕಾಂಗ್ರೆಸ್ 12 ವಾರ್ಡ್ ಗಳಲ್ಲಿ ಜಯಗಳಿಸಿದೆ. ಕೇವಲ 8 ಜನ ಸದಸ್ಯರನ್ನು ಹೊಂದಿದ್ದರೂ ಅಧಿಕಾರಕ್ಕೆ ಬಿಜೆಪಿ ಪ್ರಯತ್ನಿಸುತ್ತಿದೆ. 3 ಜನ ಪಕ್ಷೇತರರನ್ನು ಸೆಳೆಯುವುದರೊಂದಿಗೆ ಈ ಪ್ರಯತ್ನ ನಡೆಸಲಾಗುತ್ತಿದೆ.

ಸಂಕೇಶ್ವರ ಪುರಸಭೆಯ 23 ಅಭ್ಯರ್ಥಿಗಳ ಪೈಕಿ, ಕಾಂಗ್ರೆಸ್ 11 ಹಾಗೂ ಬಿಜೆಪಿ 11 ಸದಸ್ಯರನ್ನು ಹೊಂದಿದ್ದು, ಓರ್ವ ಪಕ್ಷೇತರ ಅಭ್ಯರ್ಥಿ ಇದ್ದಾರೆ. ಪಕ್ಷೇತರ ಸದಸ್ಯರನ್ನು ಸೆಳೆದು ಅಲ್ಲಿಯೂ ಅಧಿಕಾರದ ಚುಕ್ಕಾಣಿ ಹಿಡಿಯಲು ಬಿಜೆಪಿ ಪ್ರಯತ್ನಿಸುತ್ತಿದೆ ಎನ್ನಲಾಗಿದೆ.

Exit mobile version