ಕಲಬುರಗಿ: ಕಲ್ಯಾಣ ಕರ್ನಾಟಕಕ್ಕೆ ಆಗ್ರಹಿಸಿ ಪ್ರತ್ಯೇಕ ರಾಜ್ಯ ಧ್ವಜಾರೋಹಣಕ್ಕೆ ಯತ್ನಿಸಿದ ಪ್ರತಿಭಟನಕಾರರನ್ನು ಪೊಲೀಸರು ಬಂಧಿಸಿದ್ದಾರೆ.
ಇಲ್ಲಿಯ ಸರ್ದಾರ್ ವಲ್ಲಭ ಭಾಯ್ ಪಟೇಲ್ ವೃತ್ತದಲ್ಲಿ ರಾಜ್ಯೋತ್ಸವ ಕಾರ್ಯಕ್ರಮ ಬಹಿಷ್ಕರಿಸಿ, ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿಯಿಂದ ಪ್ರತ್ಯೇಕ ರಾಜ್ಯ ಧ್ವಜಾರೋಹಣಕ್ಕೆ ಯತ್ನಿಸಿದ್ದರು. ಈ ಸಂದರ್ಭದಲ್ಲಿ ಹತ್ತಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಲ್ಯಾಣ ಕರ್ನಾಟಕ ಆರಂಭದಿಂದಲೂ ಯಾವುದೇ ಸರ್ಕಾರ, ಅಸ್ತಿತ್ವಕ್ಕೆ ಬಂದರೂ ಮಲತಾಯಿ ಧೋರಣೆ ಅನುಸರಿಸಲಾಗುತ್ತಿದೆ. ಇಲ್ಲಿಯವರೆಗೂ ಇಲ್ಲಿಯವರೇ ಸಚಿವರಾದರೂ ಈ ಭಾಗವನ್ನು ವಂಚಿಸುತ್ತಿದ್ದಾರೆ. ಸಂವಿಧಾನದ ಕಲಂ 371ಕ್ಕೆ ತಿದ್ದುಪಡಿ ತಂದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ಅನ್ಯಾಯದ ಮೇಲೆ ಅನ್ಯಾಯ ನಡೆಯುತ್ತಲೇ ಇದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.