ಮಂಡ್ಯ : ಮದುವೆಯಾಗುವುದಾಗಿ ನಂಬಿಸಿ ವ್ಯಕ್ತಿಯೊಬ್ಬ ಮೋಸ ಮಾಡಿದ್ದರ ಹಿನ್ನೆಲೆಯಲ್ಲಿ ನೊಂದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಈ ಘಟನೆ ಜಿಲ್ಲೆಯ ಮದ್ದೂರು ತಾಲೂಕಿನ ಬೋರಾಪುರ ಗ್ರಾಮದಲ್ಲಿ ನಡೆದಿದ್ದು, ತಾಯಿ ನೇತ್ರಾವತಿ (30), ಮಕ್ಕಳಾದ ಶೋಭಿತಾ (09), ನಂದೀಶ್ (07) ಮೃತ ದುರ್ದೈವಿಗಳಾಗಿದ್ದಾರೆ.
ಮೃತರಾಗಿರುವ ನೇತ್ರಾವತಿ ಅವರು ಪತಿ ಸೋಮನನ್ನು ಕಳೆದುಕೊಂಡಿದ್ದರು. ಹೀಗಾಗಿ ತನ್ನ ಮಕ್ಕಳ ಜೊತೆ ಗ್ರಾಮದಲ್ಲಿ ವಾಸಿಸುತ್ತಿದ್ದರು. ಈ ಸಂದರ್ಭದಲ್ಲಿ ನೇತ್ರಾವತಿಗೆ ಆನಂದ್ ಎಂಬ ಯುವಕನ ಪರಿಚಯವಾಗಿದೆ. ಆತ, ಮದುವೆಯಾಗುತ್ತೇನೆ ಎಂದು ನಂಬಿಸಿದ್ದ. ಆದರೆ, ಇತ್ತೀಚೆಗೆ ಆತ, ಬೇರೆ ಮದುವೆಯಾಗಲು ಸಿದ್ಧತೆ ನಡೆಸಿದ್ದ. ಈ ಕುರಿತು ರಾಜಿ ಪಂಚಾಯಿತಿ ಕೂಡ ನಡೆದಿತ್ತು.
ಆದರೆ, ಅಲ್ಲಿ ನೇತ್ರಾವತಿಗೆ ಅನ್ಯಾಯವಾಗಿದೆ. ಹೀಗಾಗಿ ಅವರು, ತನ್ನ ಮಕ್ಕಳಿಬ್ಬರಿಗೆ ವಿಷ ನೀಡಿ ತಾನೂ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಷ ಸೇವಿಸುತ್ತಿದ್ದಂತೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಕೆ.ಎಂ. ದೊಡ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
