ಬೆಂಗಳೂರು : ರಾಜ್ಯದಲ್ಲಿ ಎರಡು ಕ್ಷೇತ್ರಗಳಿಗೆ ಉಪ ಚುನಾವಣೆ ನಡೆದ ಬೆನ್ನಲ್ಲಿಯೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ದೆಹಲಿಗೆ ತೆರಳಿದ್ದಾರೆ.
2 ಕ್ಷೇತ್ರಗಳ ಫಲಿತಾಂಶ ಬರುವುದಕ್ಕೆ ಇನ್ನೂ ನಾಲ್ಕು ದಿನ ಬಾಕಿ ಇರುವಂತೆ ಕೆಪಿಸಿಸಿ ಅಧ್ಯಕ್ಷರು ಏಕಾ ಏಕಿ ದೆಹಲಿಗೆ ತೆರಳಿರುವುದು ಅಚ್ಚರಿ ಮೂಡಿಸಿದೆ. ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕು ಎಂಬ ಹೇಳಿಕೆಗಳ ಕೂಗು ಉಪ ಚುನಾವಣೆ ಸಂದರ್ಭದಲ್ಲಿ ಕೇಳಿ ಬಂದಿದ್ದವು. ಇದು ಹಲವರ ಬೇಸರಕ್ಕೆ ಕಾರಣವಾಗಿತ್ತು. ಹೀಗಾಗಿಯೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ದೆಹಲಿ ಪ್ರವಾಸಕ್ಕೆ ಕಾರಣವಾಗಿರಬಹುದು ಎಂಬ ಸಂಶಯ ಕೂಡ ರಾಜಕೀಯ ಪಡಸಾಲೆಯಲ್ಲಿ ಕೇಳಿ ಬರುತ್ತಿದೆ.
ವಿಧಾನಸಭಾ ಚುನಾವಣೆಗೆ ಇನ್ನೂ ಎರಡೂವರೆ ವರ್ಷ ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಸಿಎಂ ಗಾದಿ ಬಗ್ಗೆ ಈಗ ಬಹಿರಂಗ ಹೇಳಿಕೆ ನೀಡದಂತೆ ಸಿದ್ದರಾಮಯ್ಯ ಹಾಗೂ ಅವರ ಬೆಂಬಲಿಗರಿಗೆ ಹೇಳಬೇಕು. ಪಕ್ಷದಲ್ಲಿನ ಸಮನ್ವಯತೆಗೆ ಇಂತಹ ಹೇಳಿಕೆಗಳು ಧಕ್ಕೆ ಉಂಟು ಮಾಡುತ್ತವೆ ಎಂದು ಡಿಕೆಶಿ ಹೇಳಬಹುದು ಎನ್ನಲಾಗುತ್ತಿದೆ.