ಬೆಂಗಳೂರು : ಶಾಲಾ ಶುಲ್ಕಕ್ಕೆ ಕಿರುಕುಳ ನೀಡಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿಯ ಮನೆಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.
ಇಲ್ಲಿಯ ಕೋರಮಂಗಲದ ಜಕ್ಕಸಂದ್ರದಲ್ಲಿರುವ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಜಯಂತ್ ಮನೆಗೆ ಅವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಪೋಷಕರು ಮತ್ತು ವಿದ್ಯಾರ್ಥಿಯೊಂದಿಗೆ ಮಾತುಕತೆ ನಡೆಸಿದರು. ಅಲ್ಲದೇ, ಫೀಸ್ ಗಾಗಿ ವಿದ್ಯಾರ್ಥಿಗೆ ಕಿರುಕುಳ ನೀಡಿದ ರವೀಂದ್ರ ಭಾರತಿ ಗ್ಲೋಬಲ್ ಶಾಲೆ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.
ಸೋಮಸುಂದರ ಪಾಳ್ಯದ ರವೀಂದ್ರ ಭಾರತಿ ಗ್ಲೋಬಲ್ ಶಾಲೆ ಆಡಳಿತ ಮಂಡಳಿಯಲ್ಲಿ ಜಯಂತ್ ಎಸ್ಸೆಸ್ಸೆಲ್ಸಿ ವ್ಯಾಸಂಗ ಮಾಡುತ್ತಿದ್ದ. ಆದರೆ, ಫೀಸ್ ಪಾವತಿಸಿಲ್ಲ ಎಂಬ ಕಾರಣಕ್ಕೆ ಆಡಳಿತ ಮಂಡಳಿ, ಪರೀಕ್ಷೆ ಬರೆಯುತ್ತಿದ್ದ ಜಯಂತ್ ನನ್ನು ಶಾಲೆಯಿಂದ ಅರ್ಧಕ್ಕೆ ಹೊರ ಹಾಕಿದ್ದರು. ಇದರಿಂದ ನೊಂದ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನಿಸಿದ್ದ. ಈ ವಿಷಯ ಭಾರಿ ಚರ್ಚೆಯಾಗಿತ್ತು. ಅಲ್ಲದೇ, ಪಾಲಕರು ಶಾಲೆಯ ನಿರ್ಧಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.
ರಾಜ್ಯದಾದ್ಯಂತ ಕೂಡ ಈ ವಿಷಯವಾಗಿ ಸಾಕಷ್ಟು ಚರ್ಚೆಗಳಾಗಿ ಆಕ್ರೋಶ ವ್ಯಕ್ತವಾಗಿತ್ತು. ಇವುಗಳಿಗೆ ಕಡಿವಾಣ ಹಾಕಬೇಕೆಂದು ಪಾಲಕರು ಸರ್ಕಾರಕ್ಕ ಆಗ್ರಹಿಸಿದ್ದರು. ಈ ಹಿನ್ನೆಲೆಯಲ್ಲಿ ಸಚಿವರು ವಿದ್ಯಾರ್ಥಿಯ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ಅಲ್ಲದೇ, ಇಂತಹ ಆಡಳಿತ ಮಂಡಳಿ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂಬ ಭರವಸೆ ನೀಡಿದ್ದಾರೆ.