ಬೆಂಗಳೂರು: ಮಾಜಿ ಸಿಎಂ ಹಾಗೂ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ದಿಢೀರ್ ದೆಹಲಿ ಭೇಟಿಗೆ ಮುಂದಾಗಿದ್ದಾರೆ.
ಇಂದು ಅವರು ದೆಹಲಿಗೆ ಪ್ರಯಾಣ ಬೆಳೆಸಲಿದ್ದು, ಸಂಜೆ 4 ಗಂಟೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲಿದ್ದಾರೆ. ಅಲ್ಲದೇ, ಇಂದು ಅವರು ದೆಹಲಿಯಲ್ಲಿಯೇ ಉಳಿದು ನಾಳೆ ಬೆಂಗಳೂರಿಗೆ ಆಗಮಿಸಲಿದ್ದಾರೆ. ಸದ್ಯ ರಾಜ್ಯದಲ್ಲಿ ಮೀಸಲಾತಿಗಾಗಿ ಹೋರಾಟ ನಡೆಯುತ್ತಿವೆ. ಈ ನಿಟ್ಟಿನಲ್ಲಿ ಅವರು ಚರ್ಚಿಸಲು ದೆಹಲಿಗೆ ತೆರಳಬಹುದು ಎನ್ನಲಾಗುತ್ತಿದೆ.
ಕುರುಬ ಸಮುದಾಯದವರ ಹೋರಾಟ ಕೂಡ ನಡೆಯುತ್ತಿದೆ. ಕುರುಬರಿಗೆ ಎಸ್ಟಿ ಮೀಸಲಾತಿ ನೀಡಬೇಕೆಂದು ಆಗ್ರಹಿಸಿ ಹೋರಾಟ ನಡೆಸುತ್ತಿದ್ದಾರೆ. ಈ ಹೋರಾಟದಲ್ಲಿ ಕೆ.ಎಸ್.ಈಶ್ವರಪ್ಪ ಪ್ರಮುಖ ಪಾತ್ರ ವಹಿಸಿದ್ದಾರೆ. ಹಾಗೂ ವಿಶ್ವನಾಥ್ ಅವರು ಸಿದ್ದರಾಮಯ್ಯ ವಿರುದ್ಧ ಇದೇ ಹೋರಾಟವನ್ನು ಅಸ್ತçವಾಗಿ ಬಳಸಿಕೊಂಡು ವಾಗ್ದಾಳಿ ನಡೆಸುತ್ತಿದ್ದಾರೆ.
ಕೊರೊನಾ ಬಂದ ಸಂದರ್ಭದಿಂದಲೂ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿರಲಿಲ್ಲ. ರಾಹುಲ್ ಗಾಂಧಿ ಅವರು ಡಿಕೆಶಿ ಅವರ ಮಗಳ ಆರತಕ್ಷತೆ ಬರಲಿದ್ದು, ಅವರು ಬೆಂಗಳೂರಿಗೆ ಬರುವ ಮೊದಲೇ ಸಿದ್ದರಾಮಯ್ಯ ಅವರು ಭೇಟಿಗೆ ತೆರಳಿದ್ದು, ಕುತೂಹಲಕ್ಕೆ ಕಾರಣವಾಗಿದೆ.