ಕೋಲಾರ: ಬೆಂಬಲಿಗರು ಹಾಗೂ ಕಾರ್ಯಕರ್ತರ ಒತ್ತಾಯದಂತೆ ಕಾಂಗ್ರೆಸ್ ಸೇರಲು ತೀರ್ಮಾನಿಸಿದ್ದು, ಈಗಾಗಲೇ ಆ ಪಕ್ಷದ ಮುಖಂಡರೊಂದಿಗೆ ಚರ್ಚಿಸಿದ್ದೇನೆ. ಸದ್ಯದಲ್ಲೇ ಅಂತಿಮ ನಿರ್ಧಾರವಾಗಲಿದೆ ಎಂದು ಮಾಜಿ ಸಚಿವ ವರ್ತೂರು ಪ್ರಕಾಶ್ ಹೇಳಿದರು.
ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಬಿಜೆಪಿ ಕಂಡರೆ ನನಗೆ ಮೊದಲಿನಿಂದಲೂ ಆಗುವುದಿಲ್ಲ. ಜೆಡಿಎಸ್ ಸಹವಾಸ ಬೇಡ. ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಕಾಂಗ್ರೆಸ್ ಮುಖಂಡರು ಒಪ್ಪದಿದ್ದರೆ ಹೊಲಿಗೆ ಯಂತ್ರದ ಗುರುತಿನಲ್ಲಿ ರಾಜಕೀಯ ಮುಂದುವರಿಸುತ್ತೇನೆ ಎಂದರು.
‘ವಿಧಾನಸಭೆ ಚುನಾವಣೆಗೆ 26 ತಿಂಗಳು ಬಾಕಿಯಿದೆ. ಯಾರ ಬಗ್ಗೆಯೂ ಹೆಚ್ಚು ಮಾತನಾಡುವುದಿಲ್ಲ. ಶಾಸಕನಾಗುವುದಷ್ಟೇ ನನ್ನ ಗುರಿ. ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಕಾಂಗ್ರೆಸ್’ ಪಕ್ಷದಿಂದ ಗೆಲ್ಲಲು ಸಾಧ್ಯವಾಗಲಿಲ್ಲ. ನನಗೆ 54 ವರ್ಷ ವಯಸ್ಸಾಗಿದ್ದು, ಒಂದಷ್ಟು ಕಾಲ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದಲ್ಲಿ ಇರಬೇಕೆಂದು ಬಯಸಿದ್ದೇನೆ. ಜತೆಗೆ ಕಾರ್ಯಕರ್ತರ ಒತ್ತಾಯವೂ ಇದೆ ಎಂದು ತಿಳಿಸಿದರು.