ಮಾ.4 ರಿಂದ ರಾಜ್ಯ ಬಜೆಟ್ ಅಧಿವೇಶನ: ಮೀಸಲಾತಿ ವಿಚಾರ ಸಂಪುಟ ಸಭೆಯಲ್ಲಿ ಚರ್ಚೆ!

ಬೆಂಗಳೂರು: ಮಾರ್ಚ್ ತಿಂಗಳ ಕೊನೆಯವರೆಗೂ ಬಜೆಟ್ ಅಧಿವೇಶನ ನಡೆಸಲಾಗುತ್ತಿದ್ದು, ಮಾರ್ಚ್ 4 ಮತ್ತು 5 ಎರಡು ದಿನ ಒಂದು ದೇಶ ಒಂದು ಚುನಾವಣೆ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದರು.
ಈ ಕುರಿತು ಬೆಂಗಳೂರಿನಲ್ಲಿ ಸಚಿವ ಸಂಪುಟ ಸಭೆಯ ಬಳಿಕೆ ಮಾತನಾಡಿದ ಅವರು, ರಾಜ್ಯ ಬಜೆಟ್ ಅಧಿವೇಶವನ್ನು ಮಾ.4 ರಿಂದ ಆರಂಭಿಸಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಮಾ.8 ರಂದು ಸಿಎಂ ಬಿ.ಎಸ್.ಯಡಿಯೂರಪ್ಪ, 2021-22ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ. ಈಗಾಗಲೇ ಬಜೆಟ್ ಗೆ ಸಂಬಂಧಿಸಿದಂತೆ ಸಿದ್ಧತೆ ನಡೆಸಲಾಗಿದೆ. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದಿದ್ದಾರೆ ಎಂದರು.
ಸಂಪುಟ ಸಭೆಯಲ್ಲಿ ಕೊವೀಡ್ ಸಂದರ್ಭದಲ್ಲಿ ಚಿಕಿತ್ಸೆ ನೀಡಿದ್ದ ಖಾಸಗಿ ಆಸ್ಪತ್ರೆಗಳಿಗೆ ಸುವರ್ಣ ಕರ್ನಾಟಕ ಆರೋಗ್ಯ ಯೋಜನೆಯಡಿ 700 ಕೋಟಿ ಹಣ ಬಿಡುಗಡೆಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಿರುವ ಕುರಿತು ಅವರು ತಿಳಿಸಿದರು.
ಸಂಪುಟ ಸಭೆಯಲ್ಲಿ ವಿವಿಧ ಸಮುದಾಯಗಳ ಮೀಸಲಾತಿ ವಿಚಾರದ ಬಗ್ಗೆ ಮುಖ್ಯಮಂತ್ರಿಗಳು ಚರ್ಚೆ ಮಾಡಿದ್ದಾರೆ. ಈ ಬಗ್ಗೆ ಹಲವು ಸಲಹೆಗಳನ್ನು ಕೇಳಿದ್ದರು. ಈ ಸಂಬಂಧಿಸಿದಂತೆ ಸಚಿವರುಗಳು ಸಿಎಂಗೆ ಸಲಹೆ ಕೊಟ್ಟಿದ್ದಾರೆ. ಆ ಸಲಹೆಗಳ ಬಗ್ಗೆ ಮುಂದಿನ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಮಾಡುತ್ತಾರೆ. ಈ ಬಗ್ಗೆ ಕಾನೂನು ತಜ್ಞರ ಅಭಿಪ್ರಾಯ ಪಡೆದು ಚರ್ಚೆ ನಡೆಸಲಾಗುವುದು. ಆ ನಂತರ ಸಂವಿಧಾನದ ಚೌಕಟ್ಟಿನೊಳಗೆ ತೀರ್ಮಾನ ಮಾಡುವುದಾಗಿ ಹೇಳಿದರು.

Exit mobile version