ಬೆಂಗಳೂರು : ಕೋವಿಡ್-19 ಸೋಂಕು ಪ್ರಸರಣ ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ಹಾಜರಾತಿ ಮತ್ತು ದಾಖಲಾತಿ ಕಡಿಮೆಯಾಗಿರುವುದರಿಂದ ಪ್ರಸ್ತುತ ವರ್ಷಕ್ಕೆ ಸೀಮಿತಗೊಳಿಸಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ಮತ್ತು ಆರ್ ಟಿ ಇ ಶುಲ್ಕ ಮರುಪಾವತಿಗೆ ಸಂಬಂಧಿಸಿದಂತೆ ಹಾಜರಾತಿ ಮತ್ತು ದಾಖಲಾತಿ ಕುರಿತ ನಿಯಮಗಳಲ್ಲಿ ವಿನಾಯ್ತಿ ನೀಡಲು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸೂಚನೆ ನೀಡಿದ್ದಾರೆ.
ಕೋರೋನಾ ಹಿನ್ನೆಲೆಯಲ್ಲಿ ಶಾಲೆಗಳು ತಡವಾಗಿ ಆರಂಭವಾಗಿರುವುದು ಮತ್ತು ಮಕ್ಕಳ ಶಾಲಾ ಹಾಜರಾತಿಯನ್ನು ಪೋಷಕರು ಮತ್ತು ವಿದ್ಯಾರ್ಥಿಗಳ ವಿವೇಚನೆಗೆ ಬಿಟ್ಟು ಪ್ರಸ್ತುತ ವರ್ಷ ಹಾಜರಾತಿ ಕಡ್ಡಾಯವಲ್ಲವೆಂದು ಶಿಕ್ಷಣ ಇಲಾಖೆಯೇ ಆದೇಶಿಸಿರುವ ಹಿನ್ನೆಲೆಯಲ್ಲಿ ಖಾಸಗಿ ಅನುದಾನರಹಿತ ಶಾಲೆಗಳ ಹಿತದೃಷ್ಟಿಯಿಂದ ಪ್ರಸ್ತುತ ಶೈಕ್ಷಣಿಕ ವರ್ಷಕ್ಕೆ ಸಂಬಂಧಿಸಿದಂತೆ ಮಕ್ಕಳಿಗೆ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುವ ಮತ್ತು ಆರ್.ಟಿ.ಇ.
ಶುಲ್ಕ ಮರುಪಾವತಿಗೆ ಸಂಬಂಧಿಸಿದಂತೆ ಹಾಜರಾತಿ ಮತ್ತು ದಾಖಲಾತಿ ಕುರಿತು ನಿಯಮದಲ್ಲಿ ಸಡಿಲಿಕೆ ಮಾಡಿ ವಿನಾಯ್ತಿ ನೀಡಬೇಕು ಎಂದು ಸಚಿವರು ಸೂಚಿಸಿದ್ದಾರೆ.
ರಾಜ್ಯದ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ದಾಖಲಾತಿ ಮತ್ತು ಹಾಜರಾತಿಗಳ ಆಧಾರದಲ್ಲಿ ಶಾಲೆಗಳ ಮಾನ್ಯತೆ ನವೀಕರಿಸುವ ಮೂಲಕ ವಿದ್ಯಾರ್ಥಿಗಳ ಆರ್.ಟಿ.ಇ. ಶುಲ್ಕ ಮರುಪಾವತಿ ಮತ್ತು ಎಸ್ ಎಸ್ ಎಲ್ ಸಿ ಪರೀಕ್ಷೆಗಳನ್ನು ಬರೆಯಲು ಅವಕಾಶಗಳನ್ನು ಕಲ್ಪಿಸುವ ಪ್ರಕ್ರಿಯೆಗಳು ಪ್ರತಿ ಶೈಕ್ಷಣಿಕ ಸಾಲಿನಲ್ಲಿ ಸಾಮಾನ್ಯ ಪ್ರಕ್ರಿಯೆಗಳಾಗಿವೆ.
ಸರ್ಕಾರದ ಈ ಕ್ರಮದಿಂದಾಗಿ ಖಾಸಗಿ ಶಾಲೆಗಳಿಗೆ ಆರ್ ಟಿ ಇ ಶುಲ್ಕ ಮತ್ತು ಎಸ್ ಎಸ್ ಎಲ್ ಸಿ ಪರೀಕ್ಷೆಗೆ ವಿದ್ಯಾರ್ಥಿಗಳ ಹಾಜರಾತಿಗೆ ಇದ್ದ ಹಾಜರಾತಿ/ದಾಖಲಾತಿ ಸಂಖ್ಯೆ ಕುರಿತ ನಿಯಮ ಸಡಿಲಿಕೆಯಿಂದ ಪ್ರಸ್ತುತ ವರ್ಷಕ್ಕೆ ಸಂಬಂಧಿಸಿದಂತೆ ನಿರಾಳತೆ ಬಂದಂತಾಗಿದೆ.