ಗಜೇಂದ್ರಗಡ: ರಾಜ್ಯ ಸೇರಿ ದೇಶದಲ್ಲಿ ಕೊರೊನಾ 2ನೇ ಅಲೆ ಕೈ ಮೀರುವ ಹಂತಕ್ಕೆ ತಲುಪಿದೆ. ಜನಸಾಮಾನ್ಯರಿಗೆ ಆಸ್ಪತ್ರೆಯಲ್ಲಿ ಬೆಡ್ ಸಿಗದೇ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇಂತಹ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಫಲವಾಗಿವೆ. ಕೂಡಲೇ ಸರ್ಕಾರಗಳು ರಾಷ್ಟ್ರೀಯ ವಿಪತ್ತು ಎಂದು ಘೋಷಣೆ ಮಾಡಿ, ಸಮರೋಪಾದಿಯಲ್ಲಿ ಕ್ರಮ ಕೈಗೊಳ್ಳಲು ಮುಂದಾಗಬೇಕು ಎಂದು ಜೆಡಿಎಸ್ ತಾಲೂಕಾಧ್ಯಕ್ಷ ಮಕ್ತುಮಸಾಬ ಮುಧೋಳ ಒತ್ತಾಯಿಸಿದ್ದಾರೆ.
ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರಾದ್ಯಂತ ಕೋವಿಡ್ ತನ್ನ ವಕ್ರದೃಷ್ಟಿ ತಾಳಿದೆ. ರಾಜ್ಯದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಬೆಡ್ ದೊರೆಯದ ಸ್ಥಿತಿ ಎದುರಾಗಿದೆ. ಇನ್ನು ಸಾಮಾನ್ಯ ಜನರ ಗತಿ ಏನು? ಕೋವಿಡ್ ನಿಯಂತ್ರಣ ಮಾಡುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಕಿಡಿಕಾರಿದರು.
ಕೊರೊನಾ 2ನೇ ಅಲೆ ಅಬ್ಬರ ಅತಿರೇರಕ್ಕೆ ಹೋಗುತ್ತಿದೆ. ಇಂತಹ ಪರಿಸ್ಥಿತಿಗೆ ಕಡಿವಾಣ ಹಾಕಲು ಕ್ಷೀಪ್ರಗತಿಯ ಕ್ರಮ ಕೈಗೊಳ್ಳಬೇಕು. ಅದನ್ನು ಬಿಟ್ಟು ವಿನಾಕಾರಣ ಸಭೆಗಳ ಮೇಲೆ ಸಭೆ ನಡೆಸುವ ಮೂಲಕ ಕಾಲಹರಣ ಮಾಡುತ್ತಿದ್ದಾರೆ. ದೇಶದಲ್ಲಿ ಕೋವಿಡ್ನಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಆದಾಗ್ಯೂ ಸಹ ಕೇಂದ್ರ ಸರ್ಕಾರ ರಾಷ್ಟ್ರೀಯ ವಿಪತ್ತು ಎಂದು ಘೋಷಣೆ ಮಾಡದೇ ಮೀನಾಮೇಷ ಎಣಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರ ಅಧಿಕಾರಿಗಳ ಮೂಲಕ ಕಟ್ಟು ನಿಟ್ಟಿನ ಕ್ರಮ ಕೈಗೊಂಡು ಕೋವಿಡ್ ನಿಯಂತ್ರಣ ಮಾಡದೇ ಸರ್ಕಾರ ಕಣ್ಮುಚ್ಚಿ ಕುಳಿತಿದ್ದು, ಸಂಪೂರ್ಣ ನಿಷ್ಕ್ರೀಯವಾಗಿದೆ. ಸರ್ಕಾರಿ ಕೋವಿಡ್ ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ಹಾಸಿಗೆಗಳು ಲಭ್ಯವಾಗುತ್ತಿಲ್ಲ. ಮುಂಜಾಗ್ರತೆ ಕೈಗೊಳ್ಳುವುದನ್ನು ಬಿಟ್ಟು ಸರ್ಕಾರ ಬೇಜವಾಬ್ದಾರಿ ಪ್ರದರ್ಶಿಸುತ್ತಿದೆ. ಇನ್ನು ಸೊಂಕು ಉಲ್ಬಣಿಸಿದ ಪ್ರದೇಶದಿಂದ ಆಗಮಿಸುವವರ ಬಗ್ಗೆ ನಿಗಾ ವಹಿಸಿ ಹೋಂ ಕ್ವಾರಂಟೈನ್ ಮಾಡದೇ, ಕೈಚೆಲ್ಲಿ ಕುಳಿತಿದ್ದಾರೆ.
ಗಜೇಂದ್ರಗಡ ತಾಲೂಕಿನಲ್ಲಿ ಬೆಂಗಳೂರ, ಮಹಾರಾಷ್ಟ್ರ ನಗರದಿಂದ ನಿತ್ಯ ಹಲವಾರು ಜನ ಆಗಮಿಸುತ್ತಿದ್ದಾರೆ. ಅಂತವರ ಬಗ್ಗೆ ಸಂಬಂಧ ಪಟ್ಟ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಂಡು ಹೋಂ ಕ್ವಾರಂಟೈನ್ ಮಾಡದೇ, ನಿರ್ಲಕ್ಷಿಸುತ್ತಿದ್ದಾರೆ. ಇದು ಅಪಾಯಕಾರಿ ಬೆಳವಣಿಗೆಯಾಗಿದೆ. ಕೂಡಲೇ ರಾಜ್ಯದ ಎಲ್ಲ ತಾಲೂಕುಗಳಲ್ಲಿ ಕೋವಿಡ್ ಸೋಂಕು ಪರೀಕ್ಷಾ ಪ್ರಯೋಗಾಲಯ, ಚಿಕಿತ್ಸಾ ಸೌಲಭ್ಯ ಕೇಂದ್ರ ತೆರೆಯಬೇಕು ಎಂದು ಆಗ್ರಹಿಸಿದರು.