ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಆಸ್ಪತ್ರೆಗೆ ದಾಖಲು

ಬೆಳಗಾವಿ: ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಅವರು ಸ್ನಾನ ಗೃಹದಲ್ಲಿ ಬಿದ್ದ ಕಾರಣ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲ್ಲೂಕಿನ ಕೇರೂರ ಗ್ರಾಮದಲ್ಲಿ ಆಧ್ಯಾತ್ಮ ಪ್ರವಚನಕ್ಕಾಗಿ ತೆರಳಿದ್ದ ಅವರು ಅಲ್ಲಿನ ಭಕ್ತರೊಬ್ಬರ ತೋಟದ ಮನೆಯೊಂದರಲ್ಲಿ ಉಳಿದುಕೊಂಡಿದ್ದರು. ಸ್ನಾನ ಗೃಹದಲ್ಲಿ ಕಾಲು ಜಾರಿ ಬಿದ್ದ ಕಾರಣ ಗಾಯಗೊಂಡಿದ್ದಾರೆ.


ಕೂಡಲೇ ಸಿದ್ದೇಶ್ವರ ಸ್ವಾಮೀಜಿ ಅವರಿಗೆ ಚಿಕ್ಕೋಡಿಯಲ್ಲಿ ಪ್ರಾಥಮಿಕ ಚಿಕಿತ್ಸೆ ಮಾಡಲಾಗಿದೆ. ಬಳಿಕ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಹರಾಷ್ಟ್ರದ ಕನ್ಹೇರಿ ಮಠದ ಆಸ್ಪತ್ರೆಗೆ ದಾಖಲಿಸಲಾಗಿದೆ. ಭುಜ ಹಾಗೂ ತೊಡೆಯ ಮೇಲ್ಭಾಗದಲ್ಲಿ ಮೂಳೆಗೆ ಪೆಟ್ಟು ಬಿದ್ದಿದೆ ಎಂದು ಹೇಳಲಾಗಿದ್ದು, ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ಒದಗಿಸಲಾಗುತ್ತಿದೆ.
  ಭಕ್ತರ ಆತಂಕ: ಸಿದ್ದೇಶ್ವರ ಸ್ವಾಮೀಜಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಸುದ್ದಿ ತಿಳಿಯುತ್ತಿದ್ದಂತೆ ಅವರ ಅಪಾರ ಭಕ್ತರು ಆತಂಕಕ್ಕೆ ಒಳಗಾಗಿದ್ದಾರೆ. ಸ್ವಾಮೀಜಿ ಅವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸಿದ್ದೇಶ್ವರ ಸ್ವಾಮೀಜಿ ಅವರ ಭಾವಚಿತ್ರಗಳನ್ನು ಹಾಕಿ ಬೇಗ ಗುಣಮುಖರಾಗಿ ಬನ್ನಿ ಎಂದು ಹಾರೈಸುತ್ತಿದ್ದಾರೆ.


Exit mobile version